ಬೆಂಗಳೂರು: ರಾಜ್ಯದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಕುರಿತಂತೆ ಇಂದು ಬೆಂಗಳೂರು ನಗರದಲ್ಲಿ ಅಧಿಕಾರಿಗಳೊಂದಿಗೆ ಸಿಎಂ ಬಿ.ಎಸ್.ವೈ ತುರ್ತು ಸಭೆ ನಡೆಸಿದರು. ಕರೋನಾ ವೈರಸ್ ನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಅರಿವು ಮೂಡಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಜನಜಾಗೃತಿ ಮೂಡಿಸುವುದು ಹಾಗೂ ರಾಜ್ಯಾದ್ಯಂತ ಇದೆ ಗುರುವಾರ ಮಾಸ್ಕ್ ಡೇ ಆಚರಿಸಲು ಸರ್ಕಾರ ತೀರ್ಮಾನಿಸಲಾಗಿದೆ ಎಂದರು. ಕೊರೊನಾ ಸೋಂಕು ನಿಯಂತ್ರಣಕ್ಕೆ ಜನರು ಇನ್ನು ಮುಂದೆ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ನಿಯಮವನ್ನು ಉಲ್ಲಂಘಿಸಿದವರಿಗೆ 200 ರೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಆಗುತ್ತೆ ಎಂಬ ಊಹಾಪೋಹಗಳಿಗೆ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಳಿಸುವ ಯೋಜನೆ ಇಲ್ಲ. ರಾಜ್ಯದ ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ