ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆ : ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್
- 14 Jan 2024 , 5:13 AM
- Belagavi
- 125
ಬೆಳಗಾವಿ :ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮೇ.10ರ ರಾತ್ರಿ 9 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ಸರ್ಕಾರದ ಆದೇಶದ ಪ್ರಕಾರ ನೀಡಿರುವ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕೋವಿಡ್ - 19 ಕುರಿತಂತೆ ಸರ್ಕಾರ ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಸಾರ್ವಜನಿಕರು, ವಿವಿಧ ಇಲಾಖೆಗಳ ಮುಖ್ಯಸ್ಥರು, ಖಾಸಗಿ ಸಂಘ/ಸಂಸ್ಥೆಗಳು, ಶಿಸ್ತುಬದ್ದ ಹಾಗೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಆದೇಶದಲ್ಲಿ ಸೂಚಿಸಿದ್ದಾರೆ.

ಒಂದು ವೇಳೆ ವಿಧಿಸಿದ ಸೂಚನೆಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಯಾವುದೇ ಕ್ರಮಗಳನ್ನು ಅನುಷ್ಠಾನಗೊಳಿಸದೇ ಇದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51 ರಿಂದ 60ರ ಉಪಬಂಧಗಳು ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 108ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಹಾಗೂ ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಕೆ.ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.










