ನಗರ ಮತ್ತು ಗ್ರಾಮಗಳಲ್ಲಿ ಸ್ಮಶಾನ ಜಾಗೆ ಒದಗಿಸಲು ಕಾರಜೋಳ ಸೂಚನೆ

ಬೆಳಗಾವಿ: ನಗರ ಮತ್ತು ಗ್ರಾಮಗಳಲ್ಲಿ ಸ್ಮಶಾನ ಜಾಗೆ ಒದಗಿಸಲು ತಕ್ಷಣವೇ ಕ್ರಮ‌ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ. ತಹಶೀಲ್ದಾರರ ಮೂಲಕ ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

promotions

ಗುರುವಾರ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಕರಣ ಆರಂಭಿಸಲು ಡಿ.ಎಚ್.ಓ. ಅವರಿಗೆ ಸೂಚನೆ ನೀಡಿದರು.

promotions

ಜನಪ್ರತಿನಿಧಿಗಳ ಸಭೆಯಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ಬೆಡ್, ಆಂಬ್ಯಲೆನ್ಸ್ ಮತ್ತಿತರ ಸಮಸ್ಯೆಗಳನ್ನು ಚರ್ಚಿಸಲಾಗಿದೆ. ಅವರ ಸಲಹೆ ಸೂಚನೆ ಮೇರೆಗೆ ತಕ್ಷಣವೇ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಥಣಿ ಸೇರಿದಂತೆ ಕೆಲ ತಾಲ್ಲೂಕು ಕೇಂದ್ರಗಳಲ್ಲಿ ಹೆಚ್ಚಿನ ಬೆಡ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂಬ ಬೇಡಿಕೆ ಬಂದಿದೆ. ಸಾಧ್ಯತೆಯನ್ನು ಪರಿಶೀಲಿಸಿ ಕೂಡಲೇ ಕ್ರಮ ಕೈಗೊಳ್ಳಲು ತಿಳಿಸಿದರು.

ಆಕ್ಸಿಜೆನ್ ಸಮರ್ಪಕ ಬಳಕೆಗೆ ಅನುಕೂಲವಾಗುವಂತೆ ವೈದ್ಯರಿಗೆ ಆನ್ ಲೈನ್ ತರಬೇತಿ ನೀಡಬೇಕು‌.ಮೆಡಿಸಿನ್ ಕಿಟ್ ಗಳನ್ನು ಮನೆ ಮನೆಗೆ ತಲುಪಿಸಲು ಕ್ರಮ ವಹಿಸಬೇಕು. ಈಗಾಗಲೇ ಮೊದಲ ಡೋಸ್ ಲಸಿಕೆ ಪಡೆದುಕೊಂಡವರಿಗೆ ಎರಡನೇ ಡೋಸ್ ನೀಡಲು ಪ್ರಥಮ ಆದ್ಯತೆ ನೀಡಲಾಗುತ್ತದೆ. ರೆಮಿಡಿಸಿವಿರ್ ‌ಗೆ ಹೆಚ್ಚಿನ ದರ ಪಡೆಯುತ್ತಿರುವ ದೂರುಗಳು ಬಂದಾಗ ಸಂಬಂಧಿಸಿದ ವೈದ್ಯರು ಮತ್ತು ಆಸ್ಪತ್ರೆಗಳನ್ನು ಪರಿಶೀಲಿಸಿ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಳಸಂತೆಯಲ್ಲಿ ಮಾರಾಟ ಮಾಡುವ ಪ್ರಕರಣ ಕಂಡುಬಂದರೆ ತಕ್ಷಣವೇ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸದ್ಯಕ್ಕೆ ಇಂಡೆಂಟ್ ಪ್ರಕಾರ ರೆಮಿಡಿಸಿವಿರ್ ಪೂರೈಸಲಾಗುತ್ತಿದೆ. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಂಖ್ಯೆ ಹೆಚ್ಚಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಕೆಲವು ಕಡೆಗಳಲ್ಲಿ ಆಕ್ಸಿಜನ್ ಬೆಡ್ ಕೊರತೆ ಕಂಡುಬಂದಿರುತ್ತದೆ. ಆದ್ದರಿಂದ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರಕಾರಿ ವಸತಿನಿಲಯಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಬಳಸಲಾಗುತ್ತಿದೆ. ಹೋಮ್ ಐಸೋಲೇಷನ್ ಇರಲು ತೊಂದರೆ ಇರುವವರಿಗೆ ಇಂತಹ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ರೆಮಿಡಿಸಿವಿರ್, ಆಕ್ಸಿಮೀಟರ್, ಸ್ಕ್ಯಾನಿಂಗ್ ಗೆ ಹೆಚ್ಚಿನ ದರ ಆಕರಿಸುವವರ ವಿರುದ್ಧ ಕಾನೂನು ಪ್ರಕಾರ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಸ್ಪತ್ರೆವಾರು ಲಭ್ಯವಿರುವ ಬೆಡ್ ಗಳ ಸಂಖ್ಯೆ, ಖಾಲಿ ಇರುವ ಬೆಡ್ ಗಳ ಬಗ್ಗೆ ಸಾರ್ವಜನಿಜರಿಗೆ ವಿಸ್ತೃತ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಪ್ರಚುರಪಡಿಸಲು ತಿಳಿಸಿದರು. ಎರಡನೇ ಡೋಸ್ ಲಸಿಕೆ ವಿಳಂಬವಾದರೆ ಆತಂಕಪಡುವ ಅಗತ್ಯವಿರುವುದಿಲ್ಲ ಎಂದು ತಜ್ಞರ ಸಮಿತಿ ತಿಳಿಸಿದೆ. ಆದಾಗ್ಯೂ ಎರಡನೇ ಡೋಸ್ ಲಸಿಕೆ ನೀಡಲು ಸರಕಾರ ಕ್ರಮ‌ಕೈಗೊಂಡಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.

ಸಂಸದರಾದ ಮಂಗಲಾ‌ ಅಂಗಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಮ್ ಆಮಟೆ, ಪಾಲಿಕೆಯ ಆಯುಕ್ತರಾದ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Read More Articles