ಅಪರಾಧ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ:ಬೊಮ್ಮಾಯಿ

ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಎಸಗಲಾಗುತ್ತಿರುವ ಆರ್ಥಿಕ ಅಪರಾಧ ಹಾಗೂ ಸೈಬರ್ ಕ್ರೈಮ್ ನಿಯಂತ್ರಣ ಮಾಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.

promotions

ಮಂಗಳವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಗ್ನಿಶಾಮಕ, ಗೃಹ, ಪೌರ ರಕ್ಷಕ ದಳ ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

promotions

ಇತ್ತೀಚಿಗೆ ಅಪರಾಧಗಳ ಸ್ವರೂಪ ಬದಲಾಗುತ್ತಿದೆ. ತಂತ್ರಜ್ಞಾನ ಬದಲಾದಂತೆ ಅದನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಆ ಮೂಲಕ ಆರ್ಥಿಕ ಅಪರಾಧಗಳು ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಹೊಸ ತಂತ್ರಜ್ಞಾನವನ್ನು ಮಾಡಿಕೊಳ್ಳಬೇಕು. ಈ ತಂತ್ರಜ್ಞಾನ ಬಳಕೆಗೆ ಸಂಬಂಧಪಟ್ಟಂತೆ ರೂಪಿಸಲಾಗಿರುವ ಯೋಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ನೀಡಿದ್ದಾರೆ ಎಂದು ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಗ್ನಿಶಾಮಕ ಇಲಾಖೆಯ ಕಾರ್ಯಗಳನ್ನು ವಿಶೇಷ ಅನುದಾನದ ಅಡಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ತುರ್ತು ಪರಿಸ್ಥಿತಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಯಂತ್ರೋಪಕರಣ ಕರಿದಿಗೆ ವಿಪತ್ತು ನಿರ್ವಹಣೆ ಇಲಾಖೆಗೆ 20 ಕೋಟಿ ರೂಪಾಯಿಗಳನ್ನು ನೀಡಲಾಗಿದೆ.‌ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಗಳನ್ನು ಸ್ಥಾಪಿಸುವ ಮೂಲಕ ಅಪರಾಧ ಪತ್ತೆ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ಕಳೆದ ಕೆಲವರ್ಷಗಳಿಂದ ಅಗ್ನಿಶಾಮಕ ಗೃಹ ಮತ್ತು ಪೌರ ರಕ್ಷಕ ದಳದ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ವಿತರಣೆ ಮಾಡಲು ಸಾಧ್ಯವಾಗಿರಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಈ ವರ್ಷ 2015ರಿಂದ 2020 ರ ಅವಧಿಯ ವಾರ್ಷಿಕ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯಿತು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪದಕ ಪ್ರದಾನ ಮಾಡಿದರು.

ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣೆ ಇಲಾಖೆ ಆಯೋಜಿಸಿದ್ದ ವಸ್ತುಪ್ರದರ್ಶನವನ್ನು ಅವರು ವೀಕ್ಷಿಸಿದರು.

Read More Articles