ಬೆಳಗಾವಿ: ಜಿಲ್ಲೆಯ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಇಂದು ರಾತ್ರಿ ಎಂಟು ಗಂಟೆಯಿಂದ ಮುಂದಿನ 8 ರಿಂದ 10 ದಿನಗಳ ಕಾಲ ಸಂಪೂರ್ಣ ಸ್ವಯಂಪ್ರೇರಿತ ಲಾಕ್ ಡೌನ್ ನಡೆಯಲಿದೆ, ಜೀವ ಇದ್ದರೆ ಮಾತ್ರ ಜೀವನ ಹಾಗಾಗಿ ಈ ಕೊರೋನಾ ಸೋಂಕು ನಿವಾರಿಸಲು ಅನಿವಾರ್ಯವಾಗಿ ಲಾಕ್ ಡೌನ್ ಘೋಷಿಸಬೇಕಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜನರಿಗೆ ತೊಂದರೆಯಾಗದಂತೆ ಅಗತ್ಯವಿರುವ ಸಾಮಗ್ರಿಗಳು ದೊರೆಯಲಿವೆ. ಆದರೆ ಎಲ್ಲರೂ ಸಾಮಾಜಿಕ ವ್ಯಕ್ತಿಗತ ಅಂತರ ಕಾಪಾಡಿಕೊಂಡಿರಬೇಕು. ಕಾರಣವಿಲ್ಲದೇ ಯಾರೂ ಮನೆಯಿಂದ ಹೊರಗೆ ಬರಬಾರದು ಸರ್ಕಾರದ ನಿರ್ಧಾರವನ್ನು ಪಾಲಿಸುವಂತೆ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜನರಲ್ಲಿ ಮನವಿ ಮಾಡಿದ್ದಾರೆ. ರವಿವಾರ ನಡೆದ ಟಾಸ್ಕ್ ಫೋರ್ಸ್ ಸಭೆಯ ನಂತರ ರಮೇಶ ಜಾರಕಿಹೊಳಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಈ ಸಂದರ್ಭದಲ್ಲಿ ಗೋಕಾಕ್ ತಹಶಿಲ್ದಾರ್ ಪ್ರಕಾಶ್ ಹೊಳೆಯಪ್ಪಗೋಳ್, ಪೌರಾಯುಕ್ತ ಶಿವಾನಂದ ಹಿರೇಮಠ, ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲ್ ರಾಥೋಡ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಹೆಗ್ಗನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವ್ಯಾಪಾರಸ್ಥರು, ನಗರ ಸಭೆ ಸದಸ್ಯರು ಪಾಲ್ಗೊಂಡಿದ್ದರು.