ಅಧಿವೇಶನದ ಬಳಿಕ ರಾಜ್ಯ ಪ್ರವಾಸ: ಮುಖ್ಯಮಂತ್ರಿ ಬೊಮ್ಮಾಯಿ
- 14 Jan 2024 , 11:27 PM
- Bengaluru
- 96
ಬೆಂಗಳೂರು: ವಿಧಾನಮಂಡಲ ಅಧಿವೇಶನದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ದಾವಣಗೆರೆಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಈ ವಿಷಯ ತಿಳಿಸಿದರು.

ರಾಜ್ಯ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಹಲವಾರು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದಿವೆ ಎಂದರು.
ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಹೊಸ ಜಾತಿಗಳನ್ನು ಸೇರ್ಪಡೆ ಮಾಡುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡಿರುವುದನ್ನು ಕಾರ್ಯಕಾರಣಿ ಸಭೆ ಸ್ವಾಗತಿಸಿತು.
ಅಧಿವೇಶನದ ನಂತರ ರಾಜ್ಯಾದ್ಯಂತ ಸಂಚಾರ ಮಾಡಿ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಅವರು ಹೇಳಿದರು. ದಾವಣಗೆರೆಯ ರಾಜ್ಯ ಕಾರ್ಯಕಾರಣಿ ಸಭೆ ಯಶಸ್ವಿಯಾಗಲು ಕಾರಣೀಭೂತರಾದ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ , ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ , ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಿಎಂ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.










