ಮುಖ್ಯಮಂತ್ರಿ ಪ್ರವಾಸ: ಕಾರ್ಯಕ್ರಮ ಸ್ಥಳಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
- 15 Jan 2024 , 12:33 AM
- Belagavi
- 92
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಲಿರುವ ವಿವಿಧ ಕಾರ್ಯಕ್ರಮಗಳ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪರಿಶೀಲಿಸಿದರು.

ಮುಖ್ಯಮಂತ್ರಿಗಳು ಶನಿವಾರ ಹಾಗೂ ಭಾನುವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ನಗರದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ವೀಕ್ಷಿಸಿದರು.

ಶಹಾಪುರದಲ್ಲಿರುವ ಶಿವಾಜಿ ಉದ್ಯಾನ ಬಳಿಯ ದೇಶಪ್ರೇಮಿ ವೀರ ದಿ.ರವೀಂದ್ರ ಕೌಶಿಕ್ ಇ-ಗ್ರಂಥಾಲಯ, ಟಿಳಕವಾಡಿಯಲ್ಲಿ ವಿಕಲಚೇತನ ಮಕ್ಕಳಿಗಾಗಿ ವಿನೂತನ ಮಾದರಿಯಲ್ಲಿ ನಿರ್ಮಿಸಲಾಗಿರುವ ಮಹಾತ್ಮಾ ಫುಲೆ ಉದ್ಯಾನ ಸ್ಥಳಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಾಂವಗಾಂವ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಎಜ್ಯುಕೇಶನ್ ಫೌಂಡೇಶನ್ ಆವರಣದಲ್ಲಿ ನಡೆಯುವ ದಿ.ಸುರೇಶ್ ಅಂಗಡಿ ಅವರ ಪ್ರಥಮ ಪುಣ್ಯಸ್ಮರಣೆ ಹಾಗೂ ಪುತ್ಥಳಿ ಅನಾವರಣ ಸ್ಥಳಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಕಾರ್ಯಕ್ರಮದ ರೂಪುರೇಷೆ ಮತ್ತು ವ್ಯವಸ್ಥೆಯ ಕುರಿತು ಸಂಘಟಕರೊಂದಿಗೆ ಚರ್ಚೆ ನಡೆಸಿದರು.










