ಮಂಥನ್ ಶಿಬಿರ ಯಶಸ್ವಿಗೊಳಿಸಲು ಅಗತ್ಯ ಸಹಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
- 15 Jan 2024 , 3:36 AM
- Bengaluru
- 93
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ 2 ದಿನಗಳ ಮಂಥನ್ ಶಿಬಿರ ಹಾಗೂ 41 ನೇ ಸಾರಿಗೆ ಅಭಿವೃದ್ಧಿ ಮಂಡಳಿ ಸಭೆಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು. ಶಿಬಿರದ ಆಯೋಜನೆಯ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ಸೆಪ್ಟೆಂಬರ್ 8 ಮತ್ತು 9 ರಂದು ಹಮ್ಮಿಕೊಳ್ಳಲಿರುವ ಮಂಥನ್ ರಾಷ್ಟ್ರೀಯ ಸಮ್ಮೇಳನದ ಕುರಿತು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ನಡೆಸಿದ ವೀಡಿಯೋ ಸಂವಾದದಲ್ಲಿ ಅವರು ಪಾಲ್ಗೊಂಡು ಮಾತನಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಹಲವಾರು ಬಾಕಿ ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇತ್ಯರ್ಥಗೊಳಿಸಲು ಕೂಡ ಕಾರ್ಯಕ್ರಮ ಸಹಕಾರಿಯಾಗಲಿದೆ. ರಾಜ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಗಳ ಎಲ್ಲಾ ಯೋಜನೆಗಳನ್ನು ತೀವ್ರಗತಿಯಲ್ಲಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮೋಟರು ವಾಹನಗಳ ಕಾಯ್ದೆಯ ಅನುಷ್ಠಾನದಲ್ಲಿರುವ ಕೆಲವು ಸಮಸ್ಯೆಗಳಿಗೆ ಹೊಸ ಪರಿಹಾರಗಳನ್ನು ಮಂಥನ್ ಶಿಬಿರದಲ್ಲಿ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಾತನಾಡಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ರಸ್ತೆ ನಿರ್ಮಾಣದ ಅಜೆಂಡಾ ಸಿದ್ಧವಿರಿಸಲು ಸೂಚಿಸಿದರು. ಬಾಕಿ ಇರುವ ಬೈಪಾಸ್ ಹಾಗೂ ವರ್ತುಲ ರಸ್ತೆಗಳ ವಿಷಯಗಳ ಕುರಿತು ಶಿಬಿರದಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಬಹುದಾಗಿದೆ ಎಂದು ತಿಳಿಸಿದರು.










