ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ ವರೆಗೂ ಗ್ರಾಮೀಣ ಪ್ರದೇಶದಲ್ಲಿ ಚುನಾವಣೆ ಸೂಕ್ತವಲ್ಲ; ಡಾ.ಕೆ.ಸುಧಾಕರ್
- 18 Dec 2023 , 12:11 AM
- Bengaluru
- 105
ಬೆಂಗಳೂರು: ರಾಜ್ಯದಲ್ಲಿ ಹರಡುತ್ತಿರುವ ಕೊರೋನಾ ಸೋಂಕಿನ ಸಂದರ್ಭದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ವರೆಗೂ ಗ್ರಾಮೀಣ ಪ್ರದೇಶದ ಚುನಾವಣೆಗಳನ್ನು ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ. ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದು ಪ್ರಜೆಗಳು, ಚುನಾವಣೆಯ ಮೂಲಕ ತಮ್ಮ ಹಕ್ಕನ್ನೂ ಚಲಾಯಿಸುವರೊಂದಿಗೆ ಪ್ರಜಾಪ್ರಭುತ್ವದಲ್ಲಿ ಜನರು ಚುನಾವಣೆ ಮೂಲಕ ತಮ್ಮ ಸೇವೆ ಮಾಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಈ ರೀತಿ ಜನಾದೇಶದ ಮೂಲಕ ನಡೆಯುವ ವ್ಯವಸ್ಥೆ ಪ್ರಜೆಗಳ ಪರವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ಕೋವಿಡ್ ಮಹಾಮಾರಿಯಿಂದಾಗಿ ಎಲ್ಲ ಚಟುವಟಿಕೆಗಳಿಗೂ ಅಡ್ಡಿಯಾಗಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದರೆ ಕೋವಿಡ್ ಸೋಂಕು ಮತ್ತಷ್ಟು ಹರಡುವ ಆತಂಕವನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಮಾರ್ಚ್ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸರಿಯಲ್ಲ ಎಂದು ತಜ್ಞರು ಕೂಡ ಅಭಿಪ್ರಾಯಪಟ್ಟಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕೊರೊನಾ ವೈರಸ್ ಯಾವ ಕಾಲದಲ್ಲಿ ಹೇಗೆ ವರ್ತಿಸುತ್ತದೆ ಎಂಬುದರ ಬಗ್ಗೆ ಇನ್ನೂ ಅಧ್ಯಯನಗಳಾಗುತ್ತಿವೆ. ಚಳಿಗಾಲದಲ್ಲಿ ವೈರಸ್ ಹೇಗೆ ಹರಡುತ್ತದೆ ಎಂಬುದು ಕೂಡ ಇನ್ನೂ ತಿಳಿಯಬೇಕಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆದರೆ, ಜನರು ಭೌತಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಮೊದಲಾದ ಕ್ರಮಗಳನ್ನು ಅನುಸರಿಸುವುದು ಕಷ್ಟವಾಗುತ್ತದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.












