ಮುಂಬರುವ ಚುನಾವಣೆಗಳಿಗೆ ಕಾರ್ಯಕರ್ತರು ಸಜ್ಜುಗೊಳ್ಳಿ: ಜನಾರ್ಧನ ರೆಡ್ಡಿ ಕರೆ

ಗಂಗಾವತಿ : ಐತಿಹಾಸಿಕ ಶ್ರಧ್ದಾ ಕೇಂದ್ರ ಅಂಜನಾದ್ರಿಯಲ್ಲಿ ಯಾತ್ರಿ ನಿವಾಸ ಹಾಗೂ ಗಂಗಾವತಿಯಲ್ಲಿ ಗಾರ್ಮೆಂಟ್ಸ್ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಎರಡು ಮೂರು ತಿಂಗಳಲ್ಲಿ ಆರಂಭಿಸಲಾಗುತ್ತದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

promotions

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹಾಗೂ ಗಂಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿ ನಗರದಲ್ಲಿ ನಡೆದ ಪಕ್ಷದ ಹಿಂದುಳಿದ ವರ್ಗಗಳ ಘಟಕದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಗಂಗಾವತಿ ವಿಧಾನ ಸಭಾ ಕ್ಷೇತ್ರವನ್ನು ಯಾರೂ ಊಹೆ  ಮಾಡದ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ತಿಳಿಸಿದರು.

promotions

ಮುಂಬರುವ ಸ್ಥಳೀಯ ಸಂಸ್ಥೆಗಳು ಹಾಗೂ ಲೋಕಸಭಾ ಚುನಾವಣೆಗಳಿಗೆ ಕಾರ್ಯಕರ್ತರು ಸಜ್ಜುಗೊಳ್ಳಿ ಎಂದು ಕರೆ ನೀಡುವ ಮೂಲಕ, ಪಕ್ಷದ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಲಾಗುತ್ತದೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಸೇರಿದಂತೆ ರಾಜ್ಯಾದ್ಯಂತ ಎಂಟಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಾಗುತ್ತದೆ ಎಂದರು.

ಯಾವುದೇ ಗೆಲುವು ಒಂದರಿಂದಲೇ ಆರಂಭವಾಗುತ್ತದೆ, ಈ ಮೊದಲು ದೇಶದಲ್ಲಿ ಬಿಜೆಪಿಯಿಂದ ವಾಜಪೇಯಿ ಅವರು ಮಾತ್ರ ಗೆದಿದ್ದರು, ರಾಜ್ಯದಲ್ಲಿ ಯಡಿಯೂರಪ್ಪ ನವರು ಸೇರಿದಂತೆ  ಇನ್ನಿಬ್ಬರು ಮಾತ್ರ ಆಯ್ಕೆಯಾಗಿದ್ದರು, ಅದೇ ರೀತಿ ಕೆ ಆರ್ ಪಿ ಪಕ್ಷವೂ ಒಂದರಿಂದಲೇ ಗೆಲುವನ್ನು ಆರಂಭಿಸಿದೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವ ಮೂಲಕ ಮೊದಲ ಸ್ಥಾನದಲ್ಲಿ ನಿಲ್ಲಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ, ಯುವ ಘಟಕದ ಅಧ್ಯಕ್ಷ ಭೀಮಾಶಂಕರ ಪಾಟೀಲ್, ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ವಿರೇಶ್ ಬಲಕುಂದಿ, ಕೃಷ್ಣಾಸಾ ವೈ ದಲ್ಬಂಜನ ,ಇಂದ್ರಪ್ಪ ಸುಣಗಾರ, ಪರಮೇಶಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More Articles