ಕೋವಿಡ್ ಮಾರ್ಗಸೂಚಿ ಪಾಲನೆಗೆ ಸೂಕ್ತ ಕ್ರಮ: ಡಿಸಿ

  • 15 Jan 2024 , 2:22 AM
  • Belagavi
  • 97

ಬೆಳಗಾವಿ :ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿರುವ ತಂಡಗಳು ಸಾರ್ವಜನಿಕರ ಮನವೊಲಿಸುವ ಮೂಲಕ ಕೋವಿಡ್-೧೯ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ.

ಕೋವಿಡ್-೧೯ ಮಾರ್ಗಸೂಚಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ, ಚಿಕ್ಕೋಡಿ ಹಾಗೂ ರಾಯಬಾಗ ತಾಲ್ಲೂಕುಗಳಿಗೆ ಗುರುವಾರ ಭೇಟಿ ನೀಡಿ ಅಲ್ಲಿನ ತಾಲ್ಲೂಕುಮಟ್ಟದ ಅಧಿಕಾರಿಗಳ ಜತೆ ಅವರು ಸಭೆ ನಡೆಸಿದರು.

ಅನುಮತಿಯನ್ನು ಪಡೆದುಕೊಂಡು ನಡೆಸಲಾಗುವ ಮದುವೆ, ಮತ್ತಿತರ ಸಮಾರಂಭಗಳ ಸ್ಥಳಕ್ಕೆ ತೆರಳಿ ನಿಯಮಾವಳಿ ಪಾಲನೆ ಕುರಿತು ಅರಿವು ಮೂಡಿಸಬೇಕು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡಗಳು ಕೋವಿಡ್-೧೯ ಮಾರ್ಗಸೂಚಿಯ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್-೧೯ ತಪಾಸಣೆ, ಸೋಂಕಿತರ ಪತ್ತೆಹಚ್ಚುವಿಕೆ ಹಾಗೂ ಚಿಕಿತ್ಸೆಗೆ ಮತ್ತು ಕಾಲ‌ಕಾಲಕ್ಕೆ ಸರ್ಕಾರ ಪ್ರಕಟಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ತಂಡಗಳು ಕಾರ್ಯನಿರ್ವಹಿಸಬೇಕು.

ಕೋವಿಡ್ ಸೋಂಕಿತರ ಮಾಹಿತಿ ಸಂಗ್ರಹ, ವಿನಿಮಯ ಮತ್ತು ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ನಡುವೆ ಮಾಹಿತಿ ವಿನಿಮಯಕ್ಕಾಗಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ವಾರ್ ರೂಮ್ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಿರ್ದೇಶನ ನೀಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯನಿರ್ವಹಿಸುವ ವಾರ್ ರೂಮ್ ಮೂಲಕ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಪ್ರತಿದಿನ ಮಾಹಿತಿಯನ್ನು ನೀಡಬೇಕು. ಮಾರುಕಟ್ಟೆ ಪ್ರದೇಶಗಳಲ್ಲಿ ಜನಸಂದಣಿ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಇಂತಹ ಪ್ರದೇಶಗಳಲ್ಲಿ ನಿರಂತರವಾಗಿ ಕೋವಿಡ್-೧೯ ಮಾರ್ಗಸೂಚಿ ಪಾಲನೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕೋವಿಡ್-೧೯ತಪಾಸಣೆಹೆಚ್ಚಿಸಲುಸೂಚನೆ:

ಪ್ರತಿ ತಾಲ್ಲೂಕಿನಲ್ಲಿ ಪ್ರತಿದಿನ ಕನಿಷ್ಠ ಐದು‌ನೂರು ಜನರ ಕೋವಿಡ್-೧೯ ತಪಾಸಣೆಗೆ ಗುರಿ‌ ನಿಗದಿಪಡಿಸಲಾಗಿದ್ದು, ಈ ಪ್ರಕಾರ ಜನಸಂದಣಿ ಅಥವಾ ಜನವಸತಿ ಹೆಚ್ಚಾಗಿರುವ ಪ್ರದೇಶಗಳ ಜನರ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದರು.

ಪ್ರತಿ ತಾಲ್ಲೂಕುಗಳಲ್ಲೂ ತಪಾಸಣೆ ಹೆಚ್ಚಿಸುವ ಮೂಲಕ ಸೋಂಕಿತರನ್ನು ಪತ್ತೆ ಹಚ್ಚಿ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸಕಾಲದಲ್ಲಿ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು.

ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಸಂಗ್ರಹಿಸಲಾಗುವ ಮಾದರಿಗಳನ್ನು ಜಿಲ್ಲೆಯಲ್ಲಿಯೇ ಪರೀಕ್ಷಿಸಲು ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತದಿಂದ ತೆಗೆದುಕೊಳ್ಳಲಾಗುತ್ತಿದೆ.ಮಾದರಿ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿದ ಬಳಿಕ ಪ್ರಯೋಗಾಲಯಕ್ಕೆ ಕಳಿಸಲಾಗುವ ಮಾದರಿಗಳ ವರದಿ ತಕ್ಷಣವೇ ಲಭಿಸಲಿದೆ. ಇದರಿಂದ ಸೋಂಕಿತರನ್ನು ಕೂಡಲೇ ಪ್ರತ್ಯೇಕವಾಗಿರಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ತಿಳಿಸಿದರು.

ಕುಗನೊಳ್ಳಿಚೆಕ್ಪೋಸ್ಟ್ಗೆ ಭೇಟಿ:

ಇದೇ ಸಂದರ್ಭದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿಯಲ್ಲಿ ರಾಜ್ಯದ ಗಡಿಭಾಗದಲ್ಲಿರುವ ಕುಗನೊಳ್ಳಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಭೇಟಿ ನೀಡಿ‌ ಪರಿಶೀಲಿಸಿದರು.

ಸರಕಾರದ ಮಾರ್ಗಸೂಚಿ ಪ್ರಕಾರ ಅಂತರರಾಜ್ಯ ಪ್ರಯಾಣಿಕರ ಕೋವಿಡ್ ವರದಿಯನ್ನು ಪರಿಶೀಲಿಸಬೇಕು ಎಂದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯನಿರತ ಸಿಬ್ಬಂದಿಗೆ ಸೂಚನೆ ನೀಡಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಆಯಾ ತಾಲ್ಲೂಕಿನ ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

Read All News