ಬೆಂಗಳೂರು: ಬಲಪ್ರಯೋಗದ ಮಾಡದೆ ಲಾಕ್ಡೌನ್ ಯಶಸ್ವಿಯಾಗಬೇಕಾದರೆ ಜನರ ಸಹಕಾರ ಮುಖ್ಯವಾಗಿ ಬೇಕು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಪಶು ಮಹಾವಿದ್ಯಾಲಯದಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಲಪ್ರಯೋಗ ಮಾಡದೇ ಲಾಕ್ಡೌನ್ ಯಶಸ್ವಿಗೊಳಿಸಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಲಾಠಿ ಪ್ರಹಾರ ಮಾಡದಂತೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. 14 ದಿನಗಳ ಅವಧಿಯಲ್ಲಿ ನಿಯಮಗಳನ್ನು ಪಾಲಿಸಿದರೆ ಕೋವಿಡ್ ನಿಯಂತ್ರಣ ಸಾಧ್ಯ. ಹೀಗಾಗಿ ಜನರ ಸಹಕಾರ ಅತಿ ಮುಖ್ಯವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಬಲಪ್ರಯೋಗ ಮಾಡಲಾರದೆ ವಾಹನ ಸೀಜ್ ಮಾಡುವುದು ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.