ಬೆಳಗಾವಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಖಾನಾಪುರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.
ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವಿವಿಧ ಸ್ಥಳಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ 50ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಕಾಳಜಿಯನ್ನು ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಸುನೀಲ ಮಡ್ಡಿಮನಿ ಪರಿಸರ ನಾಶ ಮಾಡುವ ಮೂರ್ಖತನದ ಕೆಲಸಕ್ಕೆ ಯಾರೂ ಕೈ ಹಾಕಬಾರದು ಬದಲಾಗಿ ಪ್ರತಿಯೊಬ್ಬರು ತಮ್ಮ ತಮ್ಮ ಕೈಲಾದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರದ ಬಲವರ್ಧನೆ ಮಾಡಬೇಕೆಂದು ಕರೆ ನೀಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯತೆಯಾಗದೆ ಅದು ನಮ್ಮೆಲ್ಲರ ಹೊಣೆಯಾಗಬೇಕು. ಎಲ್ಲರೂ ಸೇರಿ ಪರಿಸರ ರಕ್ಷಣೆಯ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಾಗಿದೆ ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಮುಂದಾಗಿ ಅಳಿವಿನಂಚಿನಲ್ಲಿರುವ ಪರಿಸರವನ್ನು ಉಳಿಸಿಕೊಳ್ಳುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಮೋದ ಕೊಚೇರಿ, ಸಂಜಯ ಕೋಬಲ್, ಸಿದ್ದು ಪಾಟೀಲ ಬಸವರಾಜ ಸಾಣೀಕೊಪ್ಪ ಸೇರಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿ ಪರಿಸರ ದಿನಾಚರಣೆ ಆಚರಣೆ ಮಾಡಿದರು.