ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಧನಸಹಾಯ ನೀಡುವ ಯೋಜನೆಯನ್ನು ಜಾರಿಗೆ ತಂದಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯಕ್ರಮ ವನ್ನು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಮುಕ್ತ ಕಂಠದಿಂದ ಶ್ಲಾಘಿಸಿದರು.
ಬೆಂಗಳೂರಿನ ಪದ್ಮನಾಭನಗರ ಬಡಾವಣೆಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ ಮೂರು ಬಿಪಿಎಲ್ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಧನ ಸಹಾಯ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೋವಿಡ್ ನಿಂದ ಹಲವಾರು ಕುಟುಂಬ ಗಳು ಸಂಕಷ್ಟ ಎದುರಿಸಿವೆ. ಅದರಲ್ಲೂ ಬಿಪಿಎಲ್ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸಿವೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ತಲಾ ಒಂದು ಲಕ್ಷ ಧನ ಸಹಾಯ ನೀಡುವ ಕಾರ್ಯಕ್ರಮ ರೂಪಿಸಿರುವುದು ಸ್ವಾಗತಾರ್ಹ. ಬಡವರ ಬಗ್ಗೆ ಯಡಿಯೂರಪ್ಪ ಮತ್ತು ನಮ್ಮ ಸರ್ಕಾರಕ್ಕೆ ಇರುವ ಕಾಳಜಿಗೆ ಇದು ನಿದರ್ಶನ ಎಂದು ಬೊಮ್ಮಾಯಿ ಹೇಳಿದರು.
ಈ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್ ಅಶೋಕ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು.