ಬೆಳಗಾವಿಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

  • 14 Jan 2024 , 11:05 PM
  • Belagavi
  • 201

ಗೋಕಾಕ: ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು.

ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಕೊಡಬೇಕು, ಆ ಜಿಲ್ಲೆಯಲ್ಲಿ ಎಷ್ಟು ಶಾಸಕರಿದ್ದಾರೆ ಎಂಬುದನ್ನು ಸರ್ಕಾರ ನಡೆಸುವವರು ವಿಚಾರ ಮಾಡಿ, ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಬೆಳಗಾವಿಗೆ ಇನ್ನೂ ಕೆಲವರಿಗೆ ಸಚಿವ ಸ್ಥಾನ ನೀಡಿದರೇ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕೂಡ ಆಗ್ರಹ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರದ ಆಡಳಿತಾವಧಿ ಮುಂದಿನ ಕೆಲವೇ ತಿಂಗಳಾಗಿರುವುದರಿಂದ ಮತ್ತೆ ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಸರ್ಕಾರ ಹಾಗೂ ಮುಖ್ಯಮಂತ್ರಿಗಳೇ ಈ ಬಗ್ಗೆ ಉತ್ತರ ಕೊಡಬೇಕು. ವಿರೋಧ ಪಕ್ಷದವರಾಗಿ ನಾವು ಈ ಬಗ್ಗೆ ಮಾತನಾಡಲು ಆಗುವುದಿಲ್ಲ ಎಂದರು.

ಮೊಟ್ಟೆ ಹಗರಣ ತನಿಖೆಯಾಗಲಿ:

ಮೊಟ್ಟೆ ಹಗರಣದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಲಾಗಿದೆ. ಅವರು ಮತ್ತಷ್ಟು ಪ್ರಬಲರಾಗಿದ್ದಾರೆ. ಅವರ ಮೇಲಿನ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಬೇಕು ಎಂದು ಸತೀಶ ಒತ್ತಾಯಿಸಿದರು.

ಜೊಲ್ಲೆ ಅವರು ಸಚಿವರಾಗುವುದಕ್ಕಿಂತ ಮುಂಚೆಯೇ ಝಿರೋ ಟ್ರಾಫಿಕ್ ನಲ್ಲಿ ಆಗಮಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಅಧಿಕಾರವನ್ನು ಯಾವ ರೀತಿ ಬೇಕಾದರು ಬಳಸಿಕೊಳ್ಳುತ್ತಾರೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದರು.

ಇಡಿ ದಾಳಿ ಬಗ್ಗೆ ಈಗಲೇ ಏನನ್ನು ಹೇಳಲು ಆಗಲ್ಲ:

ಶಾಸಕ ಹಾಗೂ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಮನೆ ಮೇಲೆ ಇಂದು ಇಡಿ ದಾಳಿ ಆಗಿರುವ ಬಗ್ಗೆ ಈಗಲೇ ಏನನ್ನು ಹೇಳಲು ಆಗುವುದಿಲ್ಲ. ಈ ಬಗ್ಗೆ ಕಾದು ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.

Read All News