ಮಹಾ ನಗರ ಪಾಲಿಕೆಯ ಚುನಾವಣೆ ಐತಿಹಾಸಿಕ ವಿಜಯದತ್ತ ಬಿಜೆಪಿ - ಸಚಿವ ಕಾರಜೋಳ ಹರ್ಷ

  • 15 Jan 2024 , 12:52 AM
  • Belagavi
  • 108

ಬೆಳಗಾವಿ ಮತ್ತು ಹುಬ್ಬಳ್ಳಿ - ಧಾರವಾಡ ಮಹಾ ನಗರ ಪಾಲಿಕೆಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಬಹುಮತದಿಂದ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ಪ್ರತಿಕ್ರಿಯಿಸಿದ್ದಾರೆ.

ಮಹಾನಗರ ಪಾಲಿಕೆಗಳ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿರುವುದಕ್ಕೆ ಕೇಂದ್ರದ ನರೇಂದ್ರ ಮೋದಿ ಮತ್ತು ರಾಜ್ಯದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಗಳು ಜನಸಾಮಾನ್ಯರ ಅಭ್ಯುದಯಕ್ಕೆ ಬೇಕಾಗಿರುವ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿರುವುದೇ ಕಾರಣ ಎಂದು ಪ್ರತಿಕ್ರಿಯೆ ನೀಡಿದ ಸಚಿವ ಕಾರಜೋಳ ಅವರು ಈ ಐತಿಹಾಸಿಕ ಗೆಲುವಿಗೆ ಕಾರಣಕರ್ತರಾದ ಈ ಮಹಾನಗರಪಾಲಿಕೆ ವ್ಯಾಪ್ತಿಯ ಮತದಾರರನ್ನು ಅಭಿನಂದಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಶಿಸ್ತಿನ ನಾಯಕತ್ವಕ್ಕೆ ಜನ ಮೆಚ್ಚುಗೆ ನೀಡಿರುವುದರಿಂದಲೇ ಈ ಗೆಲುವು ಸಾಧ್ಯವಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಆಶಿರ್ವದಿಸಿದ ಮತದಾರರಿಗೂ ಮತ್ತು ಹುಮ್ಮಸ್ಸಿನಿಂದ ಕೆಲಸ ಮಾಡಿದ ಬಿಜೆಪಿ ಕಾರ್ಯಕರ್ತರಿಗೂ, ಶ್ರಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲು ಅವರಿಗೂ, ಸಚಿವ ಸಂಪುಟದ ಇತರ ಸಹೋದ್ಯೋಗಿ ಸಚಿವರಿಗೂ ಸಚಿವ ಕಾರಜೋಳ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Read All News