ಕುಂದಾನಗರಿ ಬೆಳಗಾವಿಯಲ್ಲಿ ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ಕೇರ್ ಸೆಂಟರ್: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

  • 26 Dec 2023 , 7:52 AM
  • Belagavi
  • 102

ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನ್ನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಇ.ಎಸ್.ಐ ಆಸ್ಪತ್ರೆ, ಮಿಲಿಟರಿ ಆಸ್ಪತ್ರೆ ಹಾಗೂ ಕ್ಯಾಂಟೋನ್ಮೆಂಟ್ ಆಸ್ಪತ್ರೆಗೆ ಭಾನುವಾರ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬೇಟಿ ನೀಡಿದರು ಹಾಗೂ ಮಿಲಿಟರಿ ಆಸ್ಪತ್ರೆಯನ್ನು ಪರಿಶೀಲಿಸಿ ಮಾತನಾಡಿದ ಅವರು ಸಾಂಕ್ರಾಮಿಕ ರೋಗದ ವಿರುದ್ಧ ನಾಲ್ಕೈದು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವೈದ್ಯರು, ನರ್ಸ್ ಮತ್ತಿತರ ವೈದ್ಯಕೀಯ ಸಿಬ್ಬಂದಿಗೂ ಸೋಂಕು ತಗುಲುತ್ತಿರುವುದರಿಂದ ಅವರಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಲಭ್ಯವಿರುವ ಹಾಸಿಗೆಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು ಕೋವಿಡ್ 19 ಗೆ ಸಂಬಂಧಿಸಿದಂತೆ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಮಾಲೋಚನೆ ನಡೆಸಿದರು. ಸೋಂಕಿತರಿಗೆ ಅಗತ್ಯವಿರುವ ಆರೈಕೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು. ಸುಮಾರು 40 ಹಾಸಿಗೆ ಸೌಲಭ್ಯ ಹೊಂದಿರುವ ನಗರದ ಕ್ಯಾಂಟೋನ್ಮೆಂಟ್ ಆಸ್ಪತ್ರೆಯನ್ನು ಸೋಂಕಿತ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಮೀಸಲಿಡಲಾಗುವುದು. ಉಳಿದಂತೆ 25 ಹಾಸಿಗೆಗಳ ಇ.ಎಸ್.ಐ. ಮತ್ತು 50 ಹಾಸಿಗೆಗಳ ವ್ಯವಸ್ಥೆ ಹೊಂದಿರುವ ಮಿಲಿಟರಿ ಆಸ್ಪತ್ರೆಗಳನ್ನು ಇತರೆ ಸೋಂಕಿತರ ಚಿಕಿತ್ಸೆಗೆ ಒದಗಿಸಲಾಗುತ್ತದೆ. ಮಿಲಿಟರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಸೋಂಕಿತರನ್ನು ಇಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read All News