ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮತ್ತೊಂದು ಮಹತ್ವದ ಹುದ್ದೆ ಒಲಿದು ಬಂದಿದೆ. ಯಾವುದೇ ವಿಷಯವನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.