ಮಾಸಿಕ ವೇತನ ನಿಗದಿ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಶಾ ಕಾರ್ಯಕರ್ತರಿಂದ ಪ್ರತಿಭಟನೆ

  • 15 Jan 2024 , 2:56 AM
  • Belagavi
  • 111

ಬೆಳಗಾವಿ : ಮಾಸಿಕ ವೇತನ ನಿಗದಿ, ಆರೋಗ್ಯ ತಪಾಸಣೆ ಮತ್ತು ಸೂಕ್ತ ಚಿಕಿತ್ಸೆಗೆ ವ್ಯವಸ್ಥೆಗೆ ಬಾಕಿ ಇರುವ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮಾಸಿಕ ವೇತನ 12,000 ರೂ. ನಿಗದಿಗೊಳಿಸಬೇಕು, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಬೇಕು. ಸುರಕ್ಷತೆಗೆ ಸಾಧನಗಳನ್ನು ಒದಗಿಸಬೇಕು. ಬಾಕಿ ಇರುವ ಪ್ರೋತ್ಸಾಹ ಧನ ಬಿಡುಗಡೆಗೆ ಶೀಘ್ರ ಕ್ರಮ ಕೈಗೊಳ್ಳಬೇಕು.

ಹಾಗೂ ಘೋಷಣೆ ಮಾಡಿದಂತೆ ಕೋವಿಡ್ ವಿಶೇಷ ಪ್ರೋತ್ಸಾಹ ಧನ 3 ಸಾವಿರ ರೂ. ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೂರಾರು ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ಸರ್ದಾರ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯುನಿಯನ್ ಸೆಂಟರ್ ಕಾರ್ಯಕರ್ತರು, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಜಡಗನ್ನವರ, ಕಾರ್ಯದರ್ಶಿ ಗೀತಾ ರಾಯಗೋಳ, ಉಪಾಧ್ಯಕ್ಷೆ ರೂಪಾ ಅಂಗಡಿ, ಭಾರತಿ ಮಾಶಾಳ, ಸುಜಾತಾ ಕಾಡಮಠ, ಜಯಶ್ರೀ ನಾವಿ, ಲತಾ ಜಾಧವ್ ಮತ್ತಿತರರು ಪಾಲ್ಗೊಂಡಿದ್ದರು.

Read All News