ರಾಣಿ ಚನ್ನಮ್ಮ ವಿವಿ ನೂತನ ಕ್ಯಾಂಪಸ್ ಗೆ ಮೊದಲ ಹಂತದಲ್ಲಿ 100 ಕೋಟಿ ಹಣ; ಡಿಸಿಎಂ ಅಶ್ವತ್ ನಾರಾಯಣ

  • 15 Jan 2024 , 6:10 AM
  • Belagavi
  • 95

ಬೆಳಗಾವಿ: ಕರ್ನಾಟಕದ ದೊಡ್ಡ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕಗೆ ಪಾತ್ರರಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಭೂತರಾಮನಟ್ಟಿ ಇಂದ ಹಿರೇಬಾಗೇವಾಡಿ ಸ್ಥಳಾಂತರಿಸಲು ಸರ್ಕಾರದಿಂದ ಈಗಾಗಲೇ ಅನುಮತಿ ನೀಡಿದ ಬೆನ್ನಲ್ಲೇ ನೂತನ ಕ್ಯಾಂಪಸ್ ಸ್ಥಾಪಿಸಲು ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಹೇಳಿದರು.

ಹಿರೇಬಾಗೇವಾಡಿ ಗ್ರಾಮದ ಬಳಿ ಮಂಜೂರು ಮಾಡಲಾಗಿರುವ ಜಮೀನನ್ನು ಇಂದು ಶನಿವಾರ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಈಗಾಗಲೇ 127 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಇಲ್ಲಿ ಅಕಾಡೆಮಿಕ್ ಮತ್ತು ಆಡಳಿತ ಕೇಂದ್ರ ಎರಡೂ ಕಾರ್ಯನಿರ್ವಹಿಸಲಿವೆ. ಸ್ಥಳೀಯ ರೈತರು ಸ್ವ ಇಚ್ಛೆಯಿಂದ ಜಮೀನು ನೀಡಲು ಮುಂದಾದರೆ ಮಾತ್ರ ಖರೀದಿಸಲಾಗತ್ತದೆ. ವಿಶ್ವ ವಿದ್ಯಾಲಯದ ಪ್ರಗತಿಗೆ ಸ್ವಂತ ಕ್ಯಾಂಪಸ್ ನಿರ್ಮಿಸಬೇಕು ಎಂಬುದು ಅನೇಕ ವರ್ಷಗಳ ಬೇಡಿಕೆಯಾಗಿತ್ತು.

lv

ಆ ಪ್ರಕಾರ ಸ್ಥಳ ನಿಗದಿ ಮಾಡಲಾಗಿದೆ. ನಗರಕ್ಕೆ ಸಮೀಪ ಜಮೀನು ಸಿಗುವುದು ಕಷ್ಟ. ಸ್ಥಳ ನಿಗದಿಗೆ ಪ್ರತಿಷ್ಠೆ ಬೇಡ. ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ- ಪರ್ಯಾಯ ಸ್ಥಳದ ಸಾಧ್ಯತೆ: ವಿಶ್ವ ವಿದ್ಯಾಲಯದ ಸ್ಥಾಪನೆಗೆ ನಿಗದಿಪಡಿಸಿರುವ ಸ್ಥಳದಲ್ಲಿಯೇ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ರದ್ದು ಆಗುವುದಿಲ್ಲ. ಆದರೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲು ಅವಕಾಶಗಳು ಕೂಡ ಇವೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ತಿಳಿಸಿದರು.

ಜಮೀನು ನಿಗದಿಗೆ ಸಂಬಂಧಿಸಿದಂತೆ ರಾಜಕೀಯ ಚರ್ಚೆ ಮಾಡಲ್ಲ. ಆದರೆ ವಿವಶ್ವ ವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಎಲ್ಲ ಜನಪ್ರತಿನಿಧಿಗಳ ಪ್ರಯತ್ನದ ಮೇರೆಗೆ ಈ‌ ಜಮೀನು ಮಂಜೂರು ಮಾಡಲಾಗಿರುತ್ತದೆ.  ವಿಶ್ವವಿದ್ಯಾಲಯದ ನೂತನ ಆವರಣದಲ್ಲಿವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುವುದು.

ಅದೇ ರೀತಿ ಕಿತ್ತೂರಿನಲ್ಲಿ ಕೂಡ ಇತರೆ ಅಗತ್ಯ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಹೇಳಿದರು. ಈ ಭಾಗದಲ್ಲಿ ಇನ್ನೂ ಹೆಚ್ಚಿನ ಶೈಕ್ಷಣಿಕ ಪ್ರಗತಿಗೆ ಕ್ರಮ‌ಕೈಗೊಳ್ಳಲಾಗುವುದು. ಎಲ್ಲ ಬಗೆಯ ಶೈಕ್ಷಣಿಕ ಕೋರ್ಸ್ ಆರಂಭಿಸುವ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ. ಪ್ರಸ್ತಾವಿತ ಜಮೀನಿನಲ್ಲಿ ಇರುವ ಮಲ್ಲಯ್ಯಜ್ಜನ ದೇವಸ್ಥಾನವನ್ನು ಖಂಡಿತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದರು.

ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವರ ಜತೆ ಚರ್ಚೆ ನಡೆಸಿದ ಹಿರೇಬಾಗೇವಾಡಿ ಗ್ರಾಮಸ್ಥರು, ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯರುವ ಹೆಚ್ಚುವರಿ ಜಮೀನು ನೀಡಲು ಸಿದ್ಧವಾಗಿರುವುದಾಗಿ ತಿಳಿಸಿದರು. ಸರ್ಕಾರ ಮಂಜೂರು ಮಾಡಿರುವ ಜಮೀನಿನ ಕುರಿತು ಸಚಿವರಿಗೆ ಮಾಹಿತಿ ನೀಡಿದ ಮಾಜಿ ಶಾಸಕ ಸಂಜಯ ಪಾಟೀಲ, ಗುಡ್ಡದ ಮೇಲೆ ಸಮತಟ್ಟಾಗಿರುವ ಜಮೀನು ಇದೆ. ಹೆಚ್ಚುವರಿ ಜಮೀನು ನೀಡಲು ಗ್ರಾಮಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ, ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಪ್ರೊ.ಎಸ್.ಎಂ.ಹುರಕಡ್ಲಿ, ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಆನಂದ ಹೊಸೂರ, ಎಚ್.ಎಸ್.ಶಿಗ್ಗಾಂವ ಮತ್ತಿತರರು ಉಪಸ್ಥಿತರಿದ್ದರು.

Read All News