ಬೆಳಗಾವಿ: ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದಿರುವ ಭಾರತ ಜೋಡೊ ಐಕ್ಯತಾ ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಮಂಗಳವಾರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಮುಖರು, ರಾಹುಲ್ ಗಾಂಧಿ ಅವರ ನೇತ್ರತ್ವದಲ್ಲಿ ಈ ಯಾತ್ರೆಯನ್ನು ದೇಶದ ಉದ್ದಗಲಕ್ಕೂ ಕೈಗೊಳ್ಳಲಾಗಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಾಗಲಿದೆ. ಬಿಜೆಪಿಯ ನೀತಿಗಳು, ಭ್ರಷ್ಟಾಚಾರ, ೪೦% ಕಮಿಷನ್, ಆಡಳಿತ ವೈಫಲ್ಯ, ನಿರುದ್ಯೋಗ ಮೊದಲಾದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಪಕ್ಷ ಈ ಭಾರತ ಜೋಡೊ ಯಾತ್ರೆಯನ್ನು ನಡೆಸುತ್ತಿದೆ. ಈ ಪಾದಯಾತ್ರೆ ಕರ್ನಾಟಕದಲ್ಲಿ ಸೆಪ್ಟೆಂಬರ್ ೩೦ ರಂದು ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಪಾದಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಯಿತು,ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸದಾನಂದ ಡಂಗಣವರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಸಿ ಸಿ ಪಾಟೀಲ, ಮಹಾಂತೇಶ ಮತ್ತಿಕೊಪ್ಪ, ವಿನಯ ನಾವಲಗಟ್ಟಿ, ಯುವರಾಜ ಕದಂ, ಸುರೇಶ ಇಟಗಿ, ಶಮೀನಾ ನದಾಫ್, ಬಾಗಣ್ಣ ನರೋಟಿ, ಅಡಿವೇಶ ಇಟಗಿ ಸೇರಿದಂತೆ ಜಿಲ್ಲೆಯ ಪಕ್ಷದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.