ಕನ್ನಡ ಕೈಂಕರ್ಯದಲ್ಲಿ ತೊಡಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿಗಳಿಗೆ ಹುಕ್ಕೇರಿ ಶ್ರೀಗಳಿಂದ ಕಂಬನಿ

  • Shivaraj Bandigi
  • 14 Jan 2024 , 4:12 PM
  • Belagavi
  • 689

ಬೆಳಗಾವಿ : ʻಪಂಚೆಯ ದಡಿ ಮತ್ತು ರಾಜ್ಯದ ಗಡಿ ಭದ್ರವಾಗಿರಬೇಕುʼʼ ಎನ್ನುತ್ತಲೇ ಸದ್ದಿಲ್ಲದೆ ನಾಡಿನ ಗಡಿಭಾಗದಲ್ಲಿ ಕನ್ನಡ ಉಳಿಸಿ-ಬೆಳೆಸುವಲ್ಲಿ ತಮ್ಮನ್ನು ತಾವು ತೊಡಗಿಕೊಳ್ಳುವ ಮೂಲಕ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ʻಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿʼ ಅವರು  ಲಿಂಗೈಕ್ಯರಾಗಿರುವುದು ಕನ್ನಡ ನಾಡಿಗೆ ತುಂಬಲಾರದ ನಷ್ಟ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಅವರು ಕಂಬನಿ ಮಿಡಿದಿದ್ದಾರೆ. 

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಇವರು ಕನ್ನಡ ಕೈಂಕರ್ಯದಲ್ಲಿ ತೋಡಗಿಸಿಕೊಳ್ಳುವ ಮೂಲಕ ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು.ಚಿಕ್ಕೋಡಿ ನಗರದಿಂದ 6 ಕಿ.ಮೀ ದೂರದಲ್ಲಿ ಇರುವ ಚಿಂಚಣಿ ಎಂಬ ಪುಟ್ಟ ಗ್ರಾಮದಲ್ಲಿನ ಶ್ರೀ ಅಲ್ಲಮಪ್ರಭು ಸಿದ್ದಸಂಸ್ಥಾನ ಮಠದ ಮೂಲಕ ಕನ್ನಡ ಕಾಯಕದಲ್ಲಿ ತೊಡಗಿಕೊಂಡು ಇಡೀ ನಾಡಿನಾದ್ಯಂತ ಚಿರಪರಿಚಿತವಾಗಿದ್ದರು. ಕನ್ನಡ ನಾಡು, ನುಡಿ, ಗಡಿ, ಸಂಸ್ಕೃತಿ ಸಂರಕ್ಷಣೆ ಮತ್ತು ನಾಡಭಾಷೆಯ ಸಂವರ್ಧನೆಯ ದೀಕ್ಷೆ ತೊಟ್ಟ ಶ್ರೀ ಅಲ್ಲಮಪ್ರಭುಗಳು ಕನ್ನಡದ ಅಸ್ಮಿತೆಯನ್ನು ಗಟ್ಟಿಗೊಳಿಸುವಲ್ಲಿ ಕ್ರಿಯಾಶೀಲರಾಗಿದ್ದರು. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ಜಾಗೃತಿಯುಂಟು ಮಾಡುತ್ತ, ಕನ್ನಡ ನಿತ್ಯೋತ್ಸವ ಆಗಬೇಕು ಎಂಬ ಕನಸು ಕಟ್ಟಿಕೊಂಡ ಮಾಹಾನುಭಾವರಾಗಿದ್ದರು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಅವರು   ಶ್ರೀಗಳ ಕನ್ನಡಾಭಿಮಾನವನ್ನು ನೆನಪಿಸಿಕೊಂಡರು.

Read All News