ಇನಾಂಹೊಂಗಲ(ಸವದತ್ತಿ) :
ಸೋಲಿನ ಭೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಂಗಲ್ಯವನ್ನು ಕಿತ್ತು ಬೇರೆಯವರಿಗೆ ನೀಡಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೀಳುಮಟ್ಟಕ್ಕಿಳಿದು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎಂದರೆ ನುಡಿದಂತೆ ನಡೆಯುವ ಪಕ್ಷ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ಇನಾಂಹೊಂಗಲದ ಶ್ರೀ ಸಿದ್ಧಲಿಂಗೇಶ್ವರ ಪ್ರೌಢಶಾಲಾ ಮೈದಾನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. 2014ರಿಂದ ಕೇಂದ್ರದಲ್ಲಿ ಆಡಳಿತ ಹಿಡಿದಿರುವ ಬಿಜೆಪಿ ನಾಯಕರು, ಹಲವು ಭರವಸೆಗಳನ್ನು ನೀಡಿದ್ದರು. ಆದರೆ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ ಎಂದು ಕಿಡಿ ಕಾರಿದರು.
2014ರಲ್ಲಿ ಚಿನ್ನದ ಬೆಲೆ 2700 ರೂಪಾಯಿ ಇತ್ತು. 2024ರಲ್ಲಿ 7 ಸಾವಿರ ರೂಪಾಯಿ ಗಡಿ ದಾಟಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಜನ ಸಾಮಾನ್ಯರ ಬದುಕು ದುಸ್ತರವಾಗಿದೆ ಎಂದರು.
ಗೃಹಲಕ್ಷ್ಮಿ ಹಣ,ಉಚಿತ ಬಸ್ ಪ್ರಯಾಸದಿಂದ ಮಹಿಳೆಯರು ಇಂದು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಪಾಲಿನ ಅಕ್ಕಿ ಕೊಡದಿದ್ದರೂ ಜನರಿಗೆ ನಾವು ಅದರ ಬದಲಿಗೆ ಹಣ ಕೊಡುತ್ತಿದ್ದೇವೆ. ನಮಗೆ ಅಕ್ಕಿ ಇಲ್ಲ ಎಂದ ಕೇಂದ್ರ ಸರ್ಕಾರ, ಭಾರತ್ ರೈಸ್ ಹೆಸರಿನಲ್ಲಿ ಚುನಾವಣೆ ವೇಳೆ 29 ರೂಪಾಯಿಗೆ ನೀಡುತ್ತಿದೆ. ಉಜ್ವಲ ಹೆಸರಿನಲ್ಲಿ ಗ್ಯಾಸ್ ಸಿಲಿಂಡರ್ ಕೊಟ್ಟು, ಬೆಲೆ ಜಾಸ್ತಿ ಮಾಡಲಾಯಿತು. ಇದೀಗ ಚುನಾವಣೆ ಬಂದ ಕಾರಣ ಸಿಲಿಂಡರ್ ಬೆಲೆ ಕಡಿಮೆ ಮಾಡಲಾಗಿದೆ ಎಂದು ಡಾ.ಸುಧಾಕರ್ ಕಿಡಿಕಾರಿದರು.
ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರಿಗೆ ಈಗಾಗಲೇ ನಡುಕ ಉಂಟಾಗಿದೆ. ಸೋಲಿನ ಭೀತಿಯಿಂದ ಮೋದಿ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅನ್ಯ ಧರ್ಮದ ಬಗ್ಗೆ ಕೀಳು ಮಟ್ಟದ ಭಾಷಣ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಬೆಳಗಾವಿ ಜಿಲ್ಲೆಯ ಯುವಕ, ಪ್ರೀತಿಯ ಮಂತ್ರಿಗಳ ಮಗ ಮೃಣಾಲ್ ಹೆಬ್ಬಾಳಕರ್ ಅವರನ್ನು ಬೆಂಬಲಿಸಿ, ಕಾಂಗ್ರೆಸ್ ಪಕ್ಷವನ್ನು, ರಾಜ್ಯ ಸರ್ಕಾರವನ್ನು ಬಲಪಡಿಸಬೇಕು ಎಂದು ಸಚಿವ ಸುಧಾಕರ್ ಕರೆ ನೀಡಿದರು.
ಸವದತ್ತಿಯಲ್ಲಿ ಮೃಣಾಲ್ ಗೆ ಹೆಚ್ಚಿನ ಬೆಂಬಲ
ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರನ್ನು ಬೆಂಬಲಿಸಿ, ಈ ಭಾಗದಲ್ಲಿ ಹೆಚ್ಚಿನ ಮತಗಳನ್ನು ನೀಡಬೇಕು. ಕ್ಷೇತ್ರದ ಸಮಸ್ಯೆ, ಸಾಮಾಜಿಕ ಸಮಸ್ಯೆಗಳನ್ನು ಅರಿತಿರುವ ವ್ಯಕ್ತಿ ಮೃಣಾಲ್ ಹೆಬ್ಬಾಳಕರ್ ಎಂದು ಸವದತ್ತಿ ಶಾಸಕ ವಿಶ್ವಾಸ್ ವೈದ್ಯ ಹೇಳಿದರು.
2014ರ ಚುನಾವಣೆಯಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕಲಾಗುವುದು, ಎರಡು ಕೋಟಿ ಉದ್ಯೋಗ ನೀಡಲಾಗುವುದು ಎಂದು ಹೇಳಿ ಜನರಿಗೆ ಮೋಸ ಮಾಡಿರುವ ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಹಿವುಳ್ಳ ಗ್ಯಾರಂಟಿ ಕಾರ್ಡ್ ಗಳನ್ನು ಹಂಚಿದ್ದೇವೆ. ವರ್ಷಕ್ಕೆ ಒಂದು ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂ. ವಿಮೆ ನೀಡುವ ಯೋಜನೆ ಹೊಂದಿದ್ದೇವೆ. ಈ ಗ್ರಾಮದಲ್ಲಿ ನನಗಿಂತ ಹೆಚ್ಚಿನ ಮತಗಳು ಕಾಂಗ್ರೆಸ್ಗೆ ಬೀಳಲಿವೆ ಎಂದರು.