ಬೆಂಗಳೂರು :ಕೃಷಿ ಜಮೀನನ್ನು ಇತರ ಉದ್ದೇಶಗಳಿಗೆ ಉಪಯೋಗಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಭೂ ಕಂದಾಯ ಕಾಯ್ದೆ , 1964ರ ಕಲಂ 95 (2)ರಡಿ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂಥ ಭೂಮಿಯನ್ನು ಅಥವಾ ಅದರ ಯಾವುದೇ ಭಾಗವನ್ನು ಯಾವುದೇ ಇತರ ಉದೇಶಕ್ಕಾಗಿ ಬದಲಿಸಲು ಇಚ್ಛಿಸಿದರೆ ಅವರು ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ ಕಲಂ 2-(A)(1)(d)ರಲ್ಲಿ ಕೋಳಿ ಸಾಕಾಣಿಕೆ (Poultry Farming)ಯನ್ನು "ಕೃಷಿ" ಎಂದು ವ್ಯಾಖ್ಯಾನಿಸಲಾಗಿರುವುದರಿಂದ ಕೋಳಿ ಸಾಕಾಣಿಕೆಗೆ ಬಳಕೆಯಾಗುವ ಜಮೀನಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95ರಡಿ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.