ಅತಿವೃಷ್ಟಿ: ಸಚಿವ ಗೋವಿಂದ ಕಾರಜೋಳ ಸಭೆ

  • 15 Jan 2024 , 2:29 AM
  • Belagavi
  • 127

ಬೆಳಗಾವಿ: ಇತ್ತೀಚಿನ ಮಳೆಯಿಂದ ಯಾವುದೇ ರೀತಿಯ ಬೆಳೆ ಅಥವಾ ಮನೆಹಾನಿಯಾಗಿದ್ದರೆ ಕೂಡಲೇ ಪರಿಹಾರ ನೀಡಬೇಕು. ಮನೆಹಾನಿ ಸಮೀಕ್ಷೆಯ ಕುರಿತ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ಕೂಡ ಆಯಾ ಗ್ರಾಮ ಪಂಚಾಯತಿ ಗಳಲ್ಲಿ ಪ್ರದರ್ಶಿಸಬೇಕು. ಈ ಬಗ್ಗೆ ಸಾರ್ವಜನಿಕರ ಆಕ್ಷೇಪಣೆಗಳಿದ್ದರೆ ಅವುಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅತಿವೃಷ್ಟಿ/ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸದ್ಯಕ್ಕೆ ಯಾವುದೇ ಜಲಾಶಯಗಳು ಭರ್ತಿಯಾಗದಿರುವುದರಿಂದ ಸದ್ಯಕ್ಕೆ ನೀರು ಬಿಡುಗಡೆ ಮಾಡದಂತೆ ಜಲಾಶಯದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ಸಂದರ್ಭದಲ್ಲಿ ಉಂಟಾಗಿರುವ ಹಾನಿಯ ಕುರಿತು ಸರಕಾರಕ್ಕೆ ಸಮಗ್ರ ವರದಿ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಕಲ್ಲೋಳಬ್ಯಾರೇಜ್ಬಳಿಮಳೆಮಾಪನಕೇಂದ್ರಸ್ಥಾಪನೆ:

ಕಲ್ಲೋಳ ಬ್ಯಾರೇಜಿನಲ್ಲಿ ಮಳೆಮಾಪನ ಕೇಂದ್ರ ಸ್ಥಾಪನೆಗೆ ಪ್ರಸ್ತಾವವನ್ನು ಕಳಿಸುವಂತೆ ತಿಳಿಸಿದ ಸಚಿವರು, ಪ್ರಸ್ತಾವ ಬಂದ ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಬಳ್ಳಾರಿ ನಾಲಾದಿಂದ ಪ್ರತಿವರ್ಷ ಸಮಸ್ಯೆಗಳು ಎದುರಾಗುವುದರಿಂದ ಸಮಗ್ರವಾಗಿ ಸಮೀಕ್ಷೆ ಕೈಗೊಂಡು ವಿಸ್ತ್ರತ ವರದಿಯನ್ನು ಕಳುಹಿಸಿಕೊಡುವಂತೆ ಸಚಿವರು ತಿಳಿಸಿದರು.

ಬೃಹತ್ ಮತ್ತು ಮಧ್ಯಮ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಕೈಗೊಂಡು ವರದಿ ಸಿದ್ಧಪಡಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಸೀಮೆ ಎಣ್ಣೆಯ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪು.ಕೇ. ನಿವೇಶನಗುರುತಿಸಿಕೊಡಲುಸೂಚನೆ:

ಅಥಣಿ ತಾಲ್ಲೂಕಿನ ನಾಲ್ಕು ಪುನರ್ವಸತಿ ಕೇಂದ್ರಗಳು ಅನೇಕ ವರ್ಷಗಳಿಂದ ಖಾಲಿ ಉಳಿದಿದ್ದವು. ಆದರೆ ಇದೀಗ ಜನರು ಸ್ವಯಂಪ್ರೇರಣೆಯಿಂದ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳಲು ಮುಂದಾಗಿದ್ದರೆ ಅಲ್ಲಿರುವ ನಾಲ್ಕು ಸಾವಿರ ನಿವೇಶನಗಳನ್ನು ನಿಖರವಾಗಿ ಗುರುತಿಸಿಕೊಡುವಂತೆ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇದಲ್ಲದೇ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸೌಲಭ್ಯ ಒದಗಿಸಬಹುದು ಎಂದು ಸಲಹೆ ನೀಡಿದರು.

ಜಿಲ್ಲಾಡಳಿತದಿಂದ ಉತ್ತಮ ಕೆಲಸಗಳಾಗುತ್ತಿದ್ದು, ಇದೇ ರೀತಿ ಮುಂದುವರಿಸಬೇಕು. ಸರಕಾರದ ಮಟ್ಟದಲ್ಲಿ ಏನಾದರೂ ನೆರವಿನ ಅಗತ್ಯವಿದ್ದರೆ ತಮ್ಮ ಗಮನಕ್ಜೆ ತರುವಂತೆ ತಿಳಿಸಿದರು.

ಪ್ರವಾಹಭೀತಿಸದ್ಯಕ್ಕಿಲ್ಲ- ಜಿಲ್ಲಾಧಿಕಾರಿ:

ಜುಲೈನಲ್ಲಿ ಶೇ.41 ರಷ್ಟು ಹೆಚ್ಚಿನ ಮಳೆಯಾಗಿದ್ದು, ಆಗಸ್ಟ್ ತಿಂಗಳಿನಲ್ಲಿ ಇದುವರೆಗೆ ವಾಡಿಕೆಗಿಂತ ಶೇ. 22ರಷ್ಟು ಅಧಿಕ ಮಳೆಯಾಗಿದೆ. ರಾಜಾಪುರ ಬ್ಯಾರೇಜ್ ನಲ್ಲಿ 23 ಕ್ಯೂಸೆಕ್ ನೀರು ಹರಿವು ಇರುವುದರಿಂದ ಯಾವುದೇ ಸಮಸ್ಯೆ ಇಲ್ಲ. ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಯಾವುದೇ ಜಲಾಶಯಗಳು ಭರ್ತಿ ಆಗಿಲ್ಲದಿರುವುದರಿಂದ ಸದ್ಯಕ್ಕೆ ಪ್ರವಾಹಭೀತಿಯಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲೆಯಲ್ಲಿ ಶೇ.97.14ರಷ್ಟು ಬಿತ್ತನೆಯಾಗಿದೆ. ಇತ್ತೀಚಿನ ಮಳೆಯಿಂದ ಆಗಿರುವ ಬೆಳೆಹಾನಿಯನ್ನು ಸದ್ಯದಲ್ಲೇ ಜಂಟಿ ಸಮೀಕ್ಷೆ ಮಾಡಲಾಗುವುದು ಎಂದು ವಿವರಿಸಿದರು.

ಜಿಲ್ಲೆಯಲ್ಲಿ 7 ಮನೆಗಳು ಪೂರ್ಣವಾಗಿ ಬಿದ್ದಿರುತ್ತವೆ. ಈಗಾಗಲೇ ಪರಿಹಾರವನ್ನು ಕೂಡ ಬಿಡುಗಡೆ ಮಾಡಲಾಗಿರುತ್ತದೆ. ಮನೆಹಾನಿ ಆಗಿರುವ ಸಂದರ್ಭಗಳಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಂಡು ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗಿನ ಎಲ್ಲ ಮನೆಹಾನಿಯ ಸಮೀಕ್ಷೆ ಪೂರ್ಣಗೊಂಡಿರುತ್ತದೆ.

ಮನೆಹಾನಿಯನ್ನು ಜಿಪಿಎಸ್ ಆಧಾರಿತ ಛಾಯಾಚಿತ್ರಗಳು ಹಾಗೂ ವಿಡಿಯೋ ರೆಕಾರ್ಡಿಂಗ್ ಕೂಡ ಮಾಡಲಾಗುತ್ತಿದ್ದು, ಆಯಾ ಗ್ರಾಮ ಪಂಚಾಯತಿ ಗಳಲ್ಲಿ ಅದನ್ನು ಪ್ರದರ್ಶಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರ ಆಕ್ಷೇಪಣೆಗಳನ್ನು ಕೂಡ ಕೂಡಲೇ ಬಗೆಹರಿಸಬಹುದು ಎಂದರು.

ಕಾಳಜಿ ಕೇಂದ್ರಗಳನ್ನು ಸನ್ನದ್ಧವಾಗಿಸಲಾಗಿದ್ದು, ತುರ್ತು ಸಂದರ್ಭದಲ್ಲಿ 15 ಸಾವಿರ ಜನರನ್ನು ರಕ್ಷಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಹಣಕಾಸಿನ ಕೊರತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಬಳ್ಳಾರಿ ನಾಲಾ ನಿರ್ವಹಣೆಗೆ ಸಂಬಂಧಿಸಿದ ಹೊಣೆಗಾರಿಕೆಯನ್ನು ಸಣ್ಣ ನೀರಾವರಿ ಇಲಾಖೆಯು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಅವರು, ನರೇಗಾ ಯೋಜನೆಯಡಿ ಬಳ್ಳಾರಿ ನಾಲಾ ಹೂಳೆತ್ತುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.

ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿಗಳಾದ ಸಂತೋಷ ಕಾಮಗೌಡ, ರವೀಂದ್ರ ಕರಲಿಂಗಣ್ಣವರ, ಶಶಿಧರ್ ಬಗಲಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

Read All News