ಶ್ರೀ.ಸುರೇಶ ಆಚಾರ್ಯ, ಉಡುಪಿ ರವರಿಂದ ವಿಶೇಷ ಲೇಖನ
ಪಿತೃ ಪಕ್ಷ
ಇದೇ ಸೆಪ್ಟೆಂಬರ್ 11-09-2022 ರವಿವಾರ ದಿಂದ 25-09-2022 ರವಿವಾರದ ವರೆಗೂ ಪಿತೃಪಕ್ಷ.
ಕರ್ಮಭೂಮಿ ಎನಿಸಿದ ಈ ಭರತ ಖಂಡದ ಸನಾತನ ಧರ್ಮಗಳಲ್ಲಿ "ಶ್ರಾದ್ಧ" ಕರ್ಮವು ಮುಖ್ಯವಾಗಿದೆ. ಇದು ಅತ್ಯಂತ ಶ್ರೇಯಸ್ಕರವಾದ ಕರ್ಮವಾಗಿದೆ. ಇದಕ್ಕೆ "ಪಿತೃಯಜ್ಞ" ವೆಂದು ಕರೆಯುವದುಂಟು.
ಪಿತೃಪಕ್ಷ ದ ಮಹತ್ವವೇನು…?
ಪ್ರತಿ ವೈದಿಕ ಕ್ರಿಯೆಯಲ್ಲೂ ಗತಿಸಿದ ಪಿತೃಗಳನ್ನು ಸ್ಮರಿಸಿ "ಪಿತೃದೇವತಾಂ ನಮಸ್ಕೃತ್ಯ" ಎಂದು ಅನುಗ್ರಹ ಪಡೆದು ವೈದಿಕ ಕ್ರಿಯೆ ಮುಂದುವರಿಸುವುದು ಸಂಪ್ರದಾಯ. ಪಿತೃದೇವತೆಗಳ ಅನುಕೂಲಕ್ಕಾಗಿ ಋಣಸಂದಾಯ ಮೂಲಕ ಕರ್ತವ್ಯ ಪಾಲನೆಗೆ ಭಾದ್ರಪದ ಬಹುಳ ಪಾಡ್ಯದಿಂದ ಅಮಾವಾಸ್ಯೆವರೆಗೆ ಬರುವ ಮಹಾಲಯ - ಈ 15 ದಿನಗಳು ಪಿತೃಪಕ್ಷವೆನಿಸಿ, ಶ್ರಾದ್ಧಾವಿಧಿಗಳಿಗೆ ಪ್ರಾಶಸ್ತ್ಯ ಎಂದು ಹೇಳಿದೆ.
ಯಾರು ಮಾತಾ-ಪಿತೃರ ಶ್ರಾದ್ಧವನ್ನು ಮಾಡುವುದಿಲ್ಲವೋ ಅವನು ಮಾಡುವ ದೇವತಾಕಾರ್ಯಗಳು, ಪೂಜೆ-ಪುನಸ್ಕಾರಗಳನ್ನು ದೇವತೆ ಗಳು ಸ್ವೀಕರಿಸುವುದಿಲ್ಲವೆಂದು ಶ್ರಾದ್ಧ ನಿಯಮದಲ್ಲಿ ಹೇಳಿದೆ.
ಪಿತೃಪಕ್ಷ ಅಶುಭವಲ್ಲ.......
ಪಿತೃಪಕ್ಷದಲ್ಲಿ ಯಾವುದೇ ದೇವತಾ ಕಾರ್ಯಗಳನ್ನಾಗಲಿ, ಮಂಗಲ ಕಾರ್ಯಗಳನ್ನಾಗಲಿ ಮಾಡುವುದು ಶ್ರೇಯಸ್ಕರ ಅಲ್ಲವೆಂಬ ಅಭಿಪ್ರಾಯವಿದೆ. ಗತಿಸಿದ ಕುಟುಂಬದ ಹಿರಿಯರು, ಮಾತಾ - ಪಿತರಿಗೆ ಶ್ರಾದ್ಧ ಪಿಂಡ ತರ್ಪಣ ನೀಡಿ, ದಿವ್ಯಾತ್ಮಗಳನ್ನು ತೃಪ್ತಿಪಡಿಸಿ, ಅಗಲಿದ ಚೈತನ್ಯಗಳಿಂದ ಅನುಗ್ರಹ ಪಡೆಯುವ ಪ್ರಶಸ್ತ ಕಾಲವೇ ಪಿತೃಪಕ್ಷ. ಹಾಗೆಂದೇ ಶ್ರಾದ್ಧ ಕ್ರಿಯೆಗೆ ಪ್ರಾಧಾನ್ಯ ನೀಡಲಾಗಿದೆ.
ಶ್ರಾದ್ಧ ಎಂದರೇನು…?
ನಮ್ಮ ಜನ್ಮಕ್ಕೆ ಕಾರಣರಾಗಿ, ನಮ್ಮನ್ನು ಹೆತ್ತು ಹೊತ್ತು ಸಾಕಿ, ಸಲಹಿ ನಮ್ಮ ಉದ್ದಾರಕ್ಕೇ ಶ್ರಮಿಸಿ, ನಮ್ಮನ್ನಗಲಿ ಹೋದ ತಾಯಿ-ತಂದೆ ಹಿರಿಯರು ಮುಂತಾದವರನ್ನು ಸ್ಮರಿಸಿ, ಅವರನ್ನು ಕುರಿತು ಶ್ರದ್ಧೆಯಿಂದ ಅನ್ನಜಲಾದಿಗಳನ್ನು ಕೊಡುವ ಪಿತೃಕಾರ್ಯಕ್ಕೆ "ಶ್ರಾದ್ಧ" ವೆಂದು ಹೆಸರು. ಪಿತೃಗಳನ್ನುದ್ದೇಶಿಸಿ ಶ್ರದ್ದೆಯಿಂದ ಕೊಡಲ್ಪಟ್ಟ ದ್ರವ್ಯವನ್ನು ಮಾನಸಿಕವಾಗಿ ಭಾವನೆಯಿಂದ ಮಾಡುವ ಆಚರಣೆ ಶ್ರಾದ್ಧವೆಂದು ಹೆಸರು.
ಒಟ್ಟಿನಲ್ಲಿ ಶ್ರದ್ಧೆಯಿಂದ ತನಗೆ ಪ್ರಿಯವಾದ ಭೋಜ್ಯಗಳನ್ನು ತನ್ನ ಪಿತೃಗಳನ್ನುದ್ದೇಶಿಸಿ ಕೊಡುವ "ಪಿಂಡಪ್ರದಾನ" ಕ್ರಿಯೆಗೆ ಶ್ರಾದ್ಧವೆಂದು ಹೇಳುತ್ತಾರೆ.
ಇಲ್ಲಿ ಕೆಲವರು ಪ್ರಶ್ನೆ ಕೇಳುವುದುಂಟು - "ನಮ್ಮನ್ನಗಲಿ ಹೋದ ಪಿತೃಗಳಿಗೆ ನಾವು ಕೊಡುವ ಜಲಾಂಜಲಿ, ಪಿಂಡಪ್ರದಾನದಿಂದ ಅವರು ಹೇಗೆ ತೃಪ್ತರಾಗುತ್ತಾರೆ ? ನಾವು ಇಲ್ಲಿ ಬ್ರಾಹ್ಮಣನಿಗೆ ದಾನವಾಗಿ ಕೊಟ್ಟದ್ದು ಪಿತೃಗಳಿಗೆ ಹೇಗೆ ತಲುಪುತ್ತದೆ …?
ಯಥಾ ಧೇನುಸಹಸ್ರೇಷು
ವತ್ಸೋ ವಿಂದತಿ ಮಾತರಃ।
ತಥಾ ಪೂರ್ವಕೃತಂ
ಕರ್ಮ ಕರ್ತಾರಮನುವಿಂದತಿ॥
ಸಾವಿರಾರು ಹಸುಗಳ ಹಿಂಡಿನಲ್ಲಿದ್ದರೂ ಕರು, ತನ್ನ ತಾಯಿ ಧೇನುವನ್ನು ಹುಡುಕಿಕೊಂಡು ಅದರ ಬಳಿಗೆ ಹೋಗುವಂತೆ,
ಪಿತೃ ಕರ್ಮವು ಮನುಷ್ಯನು ಎಲ್ಲಿದ್ದರೂ ಅವನನ್ನು ಹುಡುಕಿಕೊಂಡು ಹೋಗಿ ತಗಲುತ್ತದೆ.
ಪಿತೃಪಕ್ಷ ಆಚರಣೆ ಏಕೆ…?
ಪಿತೃ ಋಣವು ಮನುಷ್ಯ ತೀರಿಸಲೇಬೇಕಾದ ಬಹುಮುಖ್ಯ ಋಣಗಳಲ್ಲೊಂದು. ಏಕೆಂದರೆ, ನಮಗೆ ಈ ದೇಹ ದೊರೆತಿರುವುದೇ ಪಿತೃಗಳಿಂದ. ಅವರು ಸಂತೃಪ್ತರಾಗಿ ಆಶೀರ್ವಾದ ಮಾಡಿದರೆ ಅದಕ್ಕಿಂತ ಹೆಚ್ಚಿನ ಬಲ ಇನ್ನೊಂದಿಲ್ಲ. ಹೀಗಾಗಿ ಪಿತೃ ಕಾರ್ಯಕ್ಕೆ ಅರ್ಹರಾದವರು ಅದನ್ನು ಮಾಡಲೇಬೇಕು ಮತ್ತು ಕಿರಿಯರು ಇದರ ಪ್ರಸಾದ, ಮಂತ್ರಾಕ್ಷತೆ ಪಡೆಯಬೇಕು. ಭಾದ್ರಪದ ಮಾಸದ ಕೃಷ್ಣಪಕ್ಷಕ್ಕೆ ಪಿತೃಪಕ್ಷ ಎನ್ನುತ್ತಾರೆ. ಈ ಪಕ್ಷಕ್ಕೆ ಮಹಾಲಯ ಪಕ್ಷ, ಅಪರ ಪಕ್ಷವೆಂದು ಕರೆಯುತ್ತಾರೆ. ಪಿತೃಪಕ್ಷವು ಹಿಂದೂ ಚಾಂದ್ರಮಾನ ತಿಂಗಳಾದ ಭಾದ್ರಪದ ಕೃಷ್ಣ ಪಕ್ಷದ ಪಾಡ್ಯದಿಂದ ಅಮಾವಾಸ್ಯೆವರೆಗೆ ಬರುತ್ತದೆ. ಪಿತೃಪಕ್ಷದ ಪ್ರಾರಂಭದಲ್ಲಿ ಸೂರ್ಯನು ಕನ್ಯಾರಾಶಿ ಪ್ರವೇಶಿಸುವಲ್ಲಿಂದ ನಂತರದ ರಾಶಿಗೆ ಹೋಗುವವರೆಗಿನ ಸಮಯದಲ್ಲಿ ಪಿತೃಗಳ ಆತ್ಮವು ಭೂಮಿಯಲ್ಲಿರುವ ತಮ್ಮ ವಂಶಜರ ಮನೆಗಳಿಗೆ ಬಂದು ಸಂಚರಿಸುತ್ತವೆ ಎಂಬ ನಂಬಿಕೆ.
ಒಬ್ಬರ ಮೂರು ತಲೆಮಾರುವರೆಗಿನ ಹಿರಿಯರು/ಪೂರ್ವಜರು/ಪಿತೃಗಳ ಆತ್ಮವು(ಸ್ಥಾನ) ಪಿತೃಲೋಕದಲ್ಲಿ ಅಂದರೆ ಭೂಮಿ ಮತ್ತು ಸ್ವರ್ಗದ ನಡುವಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿರುತ್ತಾರೆ ಅಂದರೆ ಈ ಪಿತೃಲೋಕದಲ್ಲಿ ಮೂರು ತಲೆಮಾರಿನ ಆತ್ಮಗಳು ಇರುತ್ತವೆ. ಶ್ರಾದ್ಧ ಮಾಡುವಾಗ ಈ ಲೋಕದಲ್ಲಿರುವ ಮೂರು ತಲೆಮಾರಿನ ಪೂರ್ವಜರಿಗೆ ಪಿಂಡ ಪ್ರದಾನ ಮತ್ತು ತರ್ಪಣ ಕೊಡುವ ಸಂಪ್ರದಾಯ.
ಶ್ರಾದ್ಧ ಕರ್ಮದ ಉದ್ದೇಶವೇನು…?
ಮರಣಾನಂತರ ಜೀವಿಗೆ ತನ್ನ ಕರ್ಮಾನುಸಾರ ಸ್ವರ್ಗವೋ, ನರಕವೋ ಪ್ರಾಪ್ತಿ. ಸ್ವರ್ಗವಾದರೆ ಮೋಕ್ಷ, ಅಮರತ್ವ. ಪುನರ್ಜನ್ಮವಿಲ್ಲವೆಂದು ನಂಬಿಕೆ. ಅವರಿಗೆ ಶ್ರಾದ್ಧಕರ್ಮಗಳಲ್ಲಿನ ತರ್ಪಣಗಳು ಏಕೆ ಬೇಕು ? ನರಕವಾದರೆ ಪಾಪದ ಫಲ ಅನುಭವಿಸಿದ ನಂತರ ಪುನರ್ಜನ್ಮ. ಯಾವುದೋ ರೂಪದಲ್ಲಿ ಬೇರೆಯಲ್ಲಿಯೋ ಜನ್ಮ ಪಡೆದ ಪಿತೃಗಳಿಗೆ ನಾವು ಪಿಂಡಪ್ರದಾನ ಮಾಡುವುದರ ಅವಶ್ಯಕತೆಯೇನು ? ದೇಹತ್ಯಾಗದ ನಂತರ ಆತ್ಮ ಪರಮಾತ್ಮನಲ್ಲಿ ಐಕ್ಯವಾದ ಮೇಲೆ ಜೀವಿಯ ಆತ್ಮಕ್ಕೆ ಪ್ರತ್ಯೇಕ ಅಸ್ತಿತ್ವವೆಲ್ಲಿದೆ ? ಹೀಗಾಗಿ ಇಲ್ಲಿಯೂ ಶ್ರಾದ್ಧದ ಪ್ರಮೇಯವೇನು ?
ಸಾಮಾನ್ಯವಾಗಿ ವೈದಿಕ ಸಮಾಜದಲ್ಲಿ ಆಸಕ್ತರಿಗೆ ಪಿತೃಶ್ರಾದ್ಧಾದಿ ಕಾರ್ಯ ಒಂದು ಕರ್ತವ್ಯವೆಂತಲೂ, ಅದನ್ನು ಶ್ರದ್ಧೆಯಿಂದ ಮಾಡಬೇಕೆಂತಲೂ ನಂಬಿಕೆಯಿದೆ. ಇದು ಸಾರ್ಥಕ ನಂಬಿಕೆ. ತಲತಲಾಂತರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ ಆಸ್ತಿಕ ಜನರು. ಆದರೆ ಆಚರಣೆಗಳನ್ನು ನೋಡಿ ಹೀಗೆಳೆಯುವ, ನಿಂದೆ ಮಾಡುವ ವರ್ಗವೂ ಇದೆ. ಇದೇಕೆ ಮಾಡಬೇಕು ? ಇದರಿಂದೇನು ಉಪಯೋಗ ? ಎಂದು ಹಾಸ್ಯ ಮಾಡುವ ಜನರಿಗೂ ಕೊರತೆ ಇಲ್ಲ.
ಅವರಿಗೆ ಉತ್ತರಿಸುವ ಉದ್ದೇಶವೂ ನನ್ನದಲ್ಲ. ಆಸ್ತಿಕರಾದ ಜನರಿಗೆ ಅವರ ಪಿತೃಭಕ್ತಿಯ ಜೊತೆಯಲ್ಲಿ ಶ್ರದ್ಧೆ ಹೆಚ್ಚಾಗಲಿ ಎನ್ನುವ ಉದ್ದೇಶದಿಂದ ಶ್ರಾದ್ಧ ಸಾಫಲ್ಯತೆಯ ಕುರಿತು ಈ ಎರಡು ಮಾತನ್ನು ಬರೆಯುತ್ತಿದ್ದೇನೆ. ಇದನ್ನು ಓದಿದ ಪಿತೃಭಕ್ತಿ ಪರಾಯಣರಾದ ಶ್ರದ್ಧಾಳುಗಳು ಇನ್ನೂ ಹೆಚ್ಚಿನ ಶ್ರದ್ಧೆಯಿಂದ ತಮ್ಮ ತಂದೆತಾಯಿಯರ ಮೃತತಿಥ ಅಥವಾ ಪುಣ್ಯತಿಥಿ ಆಚರಿಸೋಣ.
ಪಿತೃಶ್ರಾದ್ಧದ ಮುಖ್ಯ ಉದ್ದೇಶವೇನು…?
ಇಲ್ಲಿ ಪಿತೃವೆಂದರೆ ಯಾರು? ಯಾವುದು ? ಅದೇಕೆ ಗೌರವಾನ್ವಿತ ಹಾಗೂ ಪೂಜನೀಯವಾಯ್ತು ? ಅದು ವ್ಯಕ್ತಿಯೇ ? ದೇಹವೇ ? ಶಕ್ತಿಯೇ ? ತತ್ವವೇ ? ಚಿಂತಿಸೋಣ…
ಸಾಮಾನ್ಯವಾಗಿ ಸೂತ್ರಕಾರರ ಅಭಿಮತದಂತೆ ಪಿತೃ ಎಂಬುದು ಒಂದು ಸ್ಥಾನ, ಹುದ್ದೆ. ಅದಕ್ಕೆ ಅದರದ್ದೇ ಆದ ಜವಾಬ್ದಾರಿ, ಬದ್ಧತೆ ಇರುತ್ತದೆ. ಅದನ್ನು ಹುಟ್ಟಿದ ಪ್ರತಿಯೊಂದು ಜೀವಿಯೂ ಹೊಂದಲೇ ಬೇಕಾದ ಹುದ್ದೆ. ಅದನ್ನು ಪಡೆಯಲು, ಜವಾಬ್ದಾರಿಯುತವಾಗಿ ನಿರ್ವಹಿಸಲು ಅಸಾಮಾನ್ಯ ಜ್ಞಾನವು ಬೇಕು. ಆ ಜ್ಞಾನವು ಅನುಭವದಿಂದ ಮಾತ್ರ ಪ್ರಾಪ್ತವಾಗುವಂತಹದ್ದು.
ಕಲಿಕೆಯಿಂದ ಬರುವಂತಹದ್ದಲ್ಲ. ಅಂತಹಾ ಹುದ್ದೆಯನ್ನು ಅಲಂಕರಿಸಿದ್ದಾರೆ ನಮ್ಮ ಭೌತಿಕ ವ್ಯಾವಹಾರಿಕ ಪ್ರಪಂಚದ ಪಿತೃಗಳು. ಅಂದರೆ ಭಾವನಾತ್ಮಕ ತಂದೆಯೆಂದು ಅರ್ಥ. ವ್ಯಕ್ತಿಗತವಾಗಿ ಆ ಸ್ಥಾನವನ್ನು ಸಮರ್ಥವಾಗಿ ಅವರು ನಿರ್ವಹಿಸಿದ್ದಾರೆ ಎಂದು ಹೇಳುವ ಅರ್ಹತಾ ಪತ್ರವೇ ನಾವು. ಹಾಗಿದ್ದಾಗ ಅವರ ನಿರ್ವಹಣೆಯಲ್ಲಿ ಅನರ್ಹರು ಎಂದರೆ ನಾವು ಅನರ್ಹರು ಎಂದೇ ಅರ್ಥ.
ಅಂತಹ ಪಿತೃಸ್ಥಾನ ಪಟ್ಟವು ಪ್ರತಿಯೊಬ್ಬ ಜೀವಿಯೂ ಬಯಸಿ ಪಡೆಯುವ ಪಟ್ಟ. ಅದರ ಮಹತ್ವವೆಷ್ಟಿರಬಹುದು ಚಿಂತಿಸಿ ? ಅದನ್ನು ಪಡೆದು ನಿರ್ವಹಿಸಿ, ಯಶಸ್ವಿಯಾಗಿ ನಮ್ಮನ್ನು ಈ ಲೋಕಕ್ಕೆ, ಸಮಾಜಕ್ಕೆ ಕೊಟ್ಟು ತಾವು ತೇರ್ಗಡೆಯಾಗಿ ವಿರಮಿಸಿದ ತಂದೆತಾಯಿಯ ಸ್ಥಾನ ಪೂಜಾರ್ಹವಲ್ಲವೇ ಚಿಂತಿಸಿ ? ಅಂತಹ ಸ್ಥಾನವನ್ನು ಗೌರವಿಸುವುದು ಧರ್ಮವಲ್ಲವೇ ? ಇದು ಶ್ರಾದ್ಧದ ಹಿನ್ನಲೆಯಲ್ಲಿರುವ ಮಾನವೀಯ ಧರ್ಮ.
ಇನ್ನು ಮೃತಾನಂತರ ಪುನರ್ಜನ್ಮ. ಅವರಿಗೇಕೆ ತರ್ಪಣ ? ಪಿಂಡಪ್ರಧಾನ ಎಂಬ ಪ್ರಶ್ನೆಗಳಿವೆ. ಜನರೇ, ಈ ದೃಷ್ಟಿಯಿಂದ ಚಿಂತಿಸಬೇಕು – ತಂದೆಯು ಮೃತನಾಗುವುದಿಲ್ಲ, ದೇಹ ಮಾತ್ರ ನಾಶವಾಗಿದೆ. ತಂದೆಯು ಪುನರ್ಜನ್ಮ ಪಡೆದಿಲ್ಲ, ಆತ್ಮವು ಮಾತ್ರ ಪಡೆದಿದೆ. ತಂದೆಯು ಅಸ್ತಿತ್ವ ಕಳೆದುಕೊಳ್ಳುವುದಿಲ್ಲ, ತಂದೆಯಾಗಿಯೇ ಉಳಿದಿರುತ್ತಾರೆ. ಆತ್ಮವು ಮಾತ್ರ ಪುನರ್ಜನ್ಮ ಪಡೆದು ಹುಟ್ಟಿಬರಬಹುದು. ಆದರೆ ಅದು ಪ್ರಾಣಿಯಾಗಿ ಹುಟ್ಟಿತು ಎಂದು ಯಾರೂ ಪ್ರಸಕ್ತಕಾಲದ ವಿಳಾಸ ಹೇಳುವಾಗ ತನ್ನ ತಂದೆಯು ಪ್ರಾಣಿಯಾಗಿ ಪುನರ್ಜನ್ಮ ಪಡೆದಿದ್ದಾರೆ ಎಂದು ಗೊತ್ತಿದ್ದರೂ ತಾನು ಪ್ರಾಣಿಯ ಮಗನೆಂದು ತನ್ನ ಹೆಸರಿನ ಮುಂದೆ ಸೇರಿಸಿಕೊಳ್ಳುವುದಿಲ್ಲ.
ಪುನರ್ಜನ್ಮ ಸಿಕ್ಕಿದೆಯೋ, ಬಿಟ್ಟಿದೆಯೇ ಅದು ಬೇರೆಯ ವಿಚಾರ. ಈ ಶ್ರಾದ್ಧವನ್ನು ಮಾಡಬೇಕಾದ ಮಗನು ಬದುಕಿರುವವರೆಗೆ, ತಂದೆ ಎಂಬ ಭಾವನಾತ್ಮಕ ಅಸ್ತಿತ್ವವು ಪುನರ್ಜನ್ಮ ಪಡೆಯುವುದಿಲ್ಲ. ಆ ಪಟ್ಟ ಈ ಮಗನಿಗೆ ಸಿಗದೇ ಇರಬಹುದು. ಅಲ್ಲಿಂದ ಮುಂದೆ ಹುಟ್ಟಿದ ಆ ಮಗನಿಂದ ಶ್ರಾದ್ಧವಿಲ್ಲ, ಬೇಕಿಲ್ಲ. ಆದರೆ ತಂದೆಯ ಸ್ಥಾನ ನಿರ್ವಹಿಸಿದ ಈ ಬ್ರಹ್ಮಚಾರೀ ಮಗನನ್ನಾದರೂ ಈ ಭೂಮಿಗೆ ಕೊಟ್ಟ ತಂದೆಯು ತನ್ನ ಸ್ಥಾನ ನಿರ್ವಹಣೆ ಮಾಡಿದ್ದಾರೆ. ಅಲ್ಲಿಯವರೆಗೆ ಶ್ರಾದ್ಧ ಸಾಧುವೇ, ಸತ್ಯವೇ, ನ್ಯಾಯವೇ ಆಗಿರುತ್ತದೆ. ಅದು ಈ ಮಗನ ಅಸ್ತಿತ್ವವನ್ನು ಉಳಿಸಿಕೊಡುತ್ತದೆ ನೆನಪಿರಲಿ.
ಇಲ್ಲಿಯವರೆಗೆ ಪಿತೃಸ್ಥಾನ ಮತ್ತು ಮಗನ ಕರ್ತವ್ಯ ನಿರ್ವಹಣೆ. ಪ್ರತೀ ಜೀವಿಯೂ ಒಂದೊ ತಂದೆಯಾಗಿ ಅಥವಾ ತಾಯಿಯಾಗಿ ಸಾಫಲ್ಯತೆ ಕಾಣುವ ನಮ್ಮ ಆಧ್ಯಾತ್ಮಿಕ, ದೈವೀಕ ನೆಲೆಗಟ್ಟಿನ ಸಮಾಜ ಜೀವನದ ಪರಮೋನ್ನತ ಪದವಿ ತಂದೆ ಅಥವಾ ತಾಯಿ. ಈ ಪದವಿಗಾಗಿ ಪ್ರತೀಜೀವಿಯೂ ಹಾರೈಸುತ್ತದೆ. ಅಂತಹ ಪದವಿ ಆಕಾಂಕ್ಷೆಯಾದ ಪ್ರತೀಜೀವಿಯೂ ಆ ಸ್ಥಾನವನ್ನು ಶ್ರದ್ಧೆಯಿಂದ ಗೌರವಿಸಿದರೆ ನಿಸ್ತಂತುವಾಗಿ ವಂಶ ಬೆಳೆಯುತ್ತದೆ. ಇಲ್ಲವಾದರೆ ಮುಂದೆ ಸಂತಾನ ಲಭ್ಯವಿಲ್ಲದೆ ವಂಶ ನಿಂತು ಹೋಗಬಹುದು. ಆದ್ದರಿಂದ ಶ್ರಾದ್ಧ, ತರ್ಪಣ, ಪ್ರತಿಯೊಬ್ಬರ ಮುಖ್ಯ ಕರ್ತವ್ಯ. ಅದು ಆ ಸ್ಥಾನವನ್ನು ಗೌರವಿಸಿದಂತೆ.
ಶ್ರಾದ್ಧ ಕ್ರಿಯೆಯ ವೈಜ್ಞಾನಿಕತೆ
ಶ್ರಾದ್ಧ ಕ್ರಿಯೆಯು ದೈವಿಕವಾಗಿದ್ದರೂ ವೈಜ್ಞಾನಿಕತೆಗೆ ಎಟುಕಲಾರದ ವಿಷಯವಲ್ಲ. ಪಂಚಭೂತಗಳಿಂದ ಭೌತಿಕ ಶರೀರ ಉಂಟಾಗಿದೆ. ಮರಣಾನಂತರ ಇದು ನಾಶವಾದರೂ, ತೇಜಸ್ಸು, ಪಂಚವಾಯು ಮತ್ತು ಆಕಾಶ ತತ್ವಗಳು ಮನೋಮಯ ಕೋಶದೊಡನೆ ಕರ್ಮಾನುಸಾರ ಶರೀರಾಂತರವನ್ನು ಸೇರುವುದು. ತಂದೆಯ ಸೂಕ್ಷ್ಮ ಶರೀರಕ್ಕೂ ಪುತ್ರನ ಸೂಕ್ಷ್ಮ ಶರೀರಕ್ಕೂ ಪರಸ್ಪರ ಆಕರ್ಷಣೆಯ ಋಣಾನುಬಂಧವಿದೆ. ಪಿತೃವಿನ ಮರಣಾನಂತರವೂ ಈ ಸಂಬಂಧವು ತೊಲಗಲಾರದು.
ಆದಕಾರಣ ಪುತ್ರಕೃತ ಸಂಸ್ಕಾರಗಳು ಪಿತೃಗಳ ಸದ್ಗತಿಗೆ ಸಾಧಕಗಳಾಗುವುದು. ಇದು ಶಾಸ್ತ್ರಸಿದ್ಧ. ಮೃತ ವ್ಯಕ್ತಿಯ ಸೂಕ್ಷ್ಮ ಶರೀರವು ಯಾವ ಅಜ್ಞಾತ ಯೋನಿಯಲ್ಲಿದ್ದರೂ (ಆಕಾಶದ ಶಬ್ದ, ವಾಯುವಿನ ಸ್ಪರ್ಶ, ತೇಜಸ್ಸಿನ ತರಂಗಗಳು ಇಲ್ಲಿಂದಲ್ಲಿಗೆ ಸದಾ ಪ್ರವಹಿಸುತ್ತಿರುವ ಕಾರಣ) ಮಾಡುವ ಶ್ರಾದ್ಧದಲ್ಲಿ ಕ್ರಿಯಾಶಕ್ತಿ, ಮಂತ್ರಶಕ್ತಿ, ದ್ರವ್ಯಶಕ್ತಿಗಳು ಸಮ್ಮಿಳಿತವಾಗಿ ಲೋಕಾಂತರದಲ್ಲಿರುವ ಪಿತೃಗಳಿಗೆ (ಪಿಂಡ ತಿಲತರ್ಪಣಗಳು) ರೂಪಾಂತರ ಹೊಂದಿ ಆಹಾರವಾಗಿ ಪರಿಣಮಿಸುತ್ತದೆ. ಮಾನವನ ಸೀಮಿತ ದೃಷ್ಟಿಗೆ ಇದು ಗೋಚರಿಸದಿದ್ದರೂ "ಶ್ರಾದ್ಧೇ ಯೋಗಃ ಪ್ರವರ್ತತೇ' ಎಂದು ಋಷಿಗಳು ಈ ಸೂಕ್ಮ ರಹಸ್ಯವನ್ನು ಮನಗಂಡಿದ್ದಾರೆ.
ಪರಮ ದುರ್ಲಭವಾದ ಮನುಷ್ಯಜನ್ಮದ ಸಾಫಲ್ಯತೆಯು ಅದನ್ನು ಪಡೆದ ನಮ್ಮ ಆಚರಣೆಗಳ ಮೇಲೆ ಅವಲಂಬಿತವಾಗಿರುತ್ತದೆ. ಪರಮಾತ್ಮ ನಮಗೆ ಈ ಜನ್ಮವನ್ನು ಏತಕ್ಕಾಗಿ ನೀಡಿದ್ದಾನೆ ಎಂದರೆ ಹಿಂದಿನ ಜನ್ಮದ ಪಾಪ ಶೇಷಗಳನ್ನು ಅನುಭವಿಸಿ ಮುಗಿಸಿ ಮತ್ತೆ ಇನ್ನೂ ಹೆಚ್ಚಿನದಾದ ಪುಣ್ಯಸಂಪಾದನೆ ಮಾಡಿ ಮೋಕ್ಷವನ್ನು ಪಡೆಯಲಿ ಎಂದು. ಶಾಸ್ತ್ರಗಳ ಪ್ರಕಾರ ಮೃತರ ಆತ್ಮಗಳಿಗೆ ಶಾಶ್ವತ ಪಿತೃಲೋಕ ಪ್ರಾಪ್ತಿಯಾಗುವಂತೆ ಮಾಡುವುದು ಅವರ ಮಕ್ಕಳ ಕರ್ತವ್ಯ.
ಕಚ್ಚಾಡುವ ಮನೆ, ಕಾದಾಡುವ ಮಕ್ಕಳು, ಅಶಾಂತಿ-ಅತೃಪ್ತಿಯ ಗೃಹವಾಸ, ಇವೆಲ್ಲವುಗಳಿಗೆ ಕಾರಣ "ಪಿತೃಶಾಪ" ಎನ್ನುತ್ತದೆ ಜ್ಯೋತಿಷ್ಯ ಶಾಸ್ತ್ರ. ಪಿತೃಕಾರ್ಯಗಳು ಸರಿಯಾಗಿ ನಡೆಯದಿದ್ದರೆ ಮೇಲ್ಕಂಡ ಸ್ಥಿತಿ ಏರ್ಪಡುತ್ತದೆ ಎಂದರ್ಥ. ಸಂವತ್ಸರ ಪೂರ್ತಿ ಪಿತೃದೇವತೆಗಳು ಸಂತುಷ್ಟರಾಗಿರಬೇಕಾದರೆ ಭಾದ್ರಪದಮಾಸದ ಕೃಷ್ಣಪಕ್ಷದಲ್ಲಿ ಪಿತೃಗಳನ್ನು ಎಲ್ಲರೂ ನೆನೆಯಬೇಕು .
ಪಿತೃಪ್ರಾರ್ಥನೆ :
ಪಿತ್ರಪಕ್ಷದಲ್ಲಿ ಒಮ್ಮೆಯಾದರೂ ಈ ಪ್ರಾರ್ಥನೆಯನ್ನು ಮಾಡಿ ಪಿತೃರನ್ನು ನೆನೆದರೆ ಅವರ ಅನುಗ್ರಹ ಖಂಡಿತ
ಅಮೂರ್ತಾನಾಂ ಸುಮೂರ್ತಾನಾಂ ಪಿತೃಣಾಂ ದೀಪ್ತತೇಜಸಾಮ್|
ನಮಸ್ಯಾಮಿ ಸದಾ ಭಕ್ತ್ಯಾ ಧ್ಯಾಯಿನಾಂ ಯೋಗಚಕ್ಷುಸಾಮ್||
ದೇವತಾಭ್ಯಃ ಪಿತೃಭ್ಯಶ್ಚ ಮಹಾಯೋಗಿಭ್ಯ ಏವ ಚ|
ನಮಃ ಸ್ವಧಾಯೈ ಸ್ವಾಹಾಯೈ ನಿತ್ಯಮೇವ ನಮೋ ನಮಃ||