ಕಾರವಾರ: ರಾಜ್ಯದ 2ನೇ ಹಂತದ ಮತದಾನಕ್ಕೂ ಮುನ್ನ ಏಪ್ರಿಲ್ 28ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರು ಕಡೆ ಬೃಹತ್ ಚುನಾವಣಾ ಪ್ರಚಾರ ಸಮಾವೇಶ ನಡೆಸಲಿದ್ದಾರೆ. ಇದೇ ವೇಳೆ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಮನೆ ಸಮೀಪದ ಮೈದಾನದಲ್ಲೇ ಮೋದಿ ಸಮಾವೇಶ ನಡೆಯಲಿರುವುದು ಕುತೂಹಲ ಮೂಡಿಸಿದೆ. ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಬಳಿಕ ಸಂಸದ ಅನಂತಕುಮಾರ್ ಹೆಗಡೆ ನಿವಾಸದ ಅನತಿ ದೂರದಲ್ಲಿರುವ ಮೈದಾನದಲ್ಲೇ ಮೋದಿ ಸಮಾವೇಶ ನಡೆಯಲಿದೆ, ಈ ಸಮಾವೇಶದಲ್ಲಿ ಅಂತರಕಾಯ್ದುಕೊಂಡ ಅನಂತಕುಮಾರ್ ಹೆಗಡೆ ಭಾಗವಹಿಸುತ್ತಾರಾ ? ಎಂಬ ಪ್ರಶ್ನೆ ಮೂಡಿದೆ.