ಆಯುಷ್ ಆಸ್ಪತ್ರೆಗಳಿಗೆ ಸೂಕ್ತ ಮೇಲ್ವಿಚಾರಣೆ: ಸಚಿವ ದಿನೇಶ್ ಗುಂಡೂರಾವ್

  • shivaraj bandigi
  • 15 Jan 2024 , 3:09 AM
  • Belagavi
  • 473

ಬೆಳಗಾವಿ:  ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿ ವ್ಯವಸ್ಥೆ ಮಾಡುವುದು ಸೇರಿದಂತೆ ಎಲ್ಲಾ ರೀತಿಯಿಂದ ಸೂಕ್ತ ಮೇಲ್ವಿಚಾರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯರಾದ ಪಿ.ಎಚ್.ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿರುವ 80 ಆಸ್ಪತ್ರೆಗಳಲ್ಲಿ ಈಗಾಗಲೇ 55 ಆಯುಷ್ ಆಸ್ಪತ್ರೆಗಳಲ್ಲಿ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲಾಗಿದ್ದು ಉಳಿದ 25 ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುತ್ತಿದೆ.

ಜಿಲ್ಲಾ ಆಯಷ್ ಅಧಿಕಾರಿಗಳ ಪ್ರತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ಆಸ್ಪತ್ರೆಗಳ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಆಯುಷ್ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕೊರತೆ ಇರುವ ಕಡೆ ಗಮನ ಕೊಟ್ಟು ಔಷಧಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಆಯುಷ್ ತಜ್ಞ ವೈದ್ಯರ ನೇಮಕಕ್ಕೆ ಒತ್ತು ಕೊಡಲಾಗುತ್ತಿದೆ.

ಕೇಂದ್ರ ಸರ್ಕಾರವು ಆಯುಷ್ ಆಸ್ಪತ್ರೆಗಳಿಗೆ ಔಷಧಿ, ಸಲಕರಣೆ ಮತ್ತು ಉಪಕರಣಕ್ಕೆ ನೀಡಿದ ಅನುದಾನದ ಸದ್ಭಳಕೆ ಮಾಡಲಾಗುತ್ತಿದೆ. ಎರಡು ತಿಂಗಳೊಳಗೆ ಅವಶ್ಯವಿರುವ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

Read All News