ರೈತರಿಗೆ ಉತ್ತಮ ಗುಣಮಟ್ಟದ Already ಬೀಜ, ರಸಗೊಬ್ಬರ ಪೂರೈಸಿ : ಶಿವರಾಜ ತಂಗಡಗಿ

  • shivaraj bandigi
  • 19 Jun 2024 , 7:08 PM
  • Koppal
  • 4133

ಕೊಪ್ಪಳ: ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ರೀತಿಯ ಮಳೆಯಾಗಿದ್ದು, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಪೂರೈಸಲು ಕ್ರಮಕೈಗೊಳ್ಳುವಂತೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು  ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜೂನ್ 19ರಂದು ಹಮ್ಮಿಕೊಂಡಿದ್ದ 2023-24ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ 4ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರಗಳನ್ನು ರೈತರ ಬೇಡಿಕೆಯನ್ವಯ ನಿಯಮಿತವಾಗಿ ಪೂರೈಸಬೇಕು. ಇದಕ್ಕಾಗಿ ಕೃಷಿ ಅಧಿಕಾರಿಗಳು ಪ್ರತಿ ತಾಲ್ಲೂಕು/ವಿಧಾನಸಭಾ ಕ್ಷೆತ್ರವಾರು ಭೇಟಿ ನೀಡಿ, ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಇರುವ ಬಗ್ಗೆ ಪರಿಶೀಲಿಸಬೇಕು. ಕಳಪೆ ಬೀಜ ಮತ್ತು ರಸಗೊಬ್ಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧೀಸಿದವರ ವಿರುದ್ಧ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸಬೇಕು. ಕಳೆದ ವರ್ಷದಲ್ಲಿ ಕಳಪೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿರುವ ಬಾಕಿ ಇರುವ ಪ್ರಕರಣಗಳನ್ನು ಅದಷ್ಟು  ಬೇಗನೆ ಇತ್ಯರ್ಥ ಮಾಡುವ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಕುರಿತು ರೈತರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಗಂಗಾವತಿ ತಾಲ್ಲೂಕಿನ ಸಿದ್ದಾಪುರದಲ್ಲಿ ಕೆಆರ್‌ಐಡಿಎಲ್ ನಿಂದ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರ ಕಾಮಗಾರಿ ಕಳಪೆಯಾಗಿದ್ದು, ಈ ಬಗ್ಗೆ ಅನುಷ್ಠಾನ ಏಜೆನ್ಸಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ನಿರ್ಮಾಣ ಕಾಮಗಾರಿಗೆ ತಗುಲಿದ ವೆಚ್ಚವನ್ನು ಅಧಿಕಾರಿಗಳಿಂದ ವಸೂಲಿ ಮಾಡಿ. ಇದರಂತೆ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುವ ಯಾವುದೇ ಸಿವಿಲ್ ಕಾಮಗಾರಿಯನ್ನು ಕಡ್ಡಾಯವಾಗಿ ಥರ್ಡ್ ಪಾರ್ಟಿ ಪರಿಶೀಲನೆಗೆ ಒಳಪಡಿಸಬೇಕು. ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಕಚೇರಿಗಳಿಗೆ ಭೇಟಿ ನಿಡುವ ರೈತರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ವರ್ತಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು.

ತೋಟಗಾರಿಕೆ ಪಾರ್ಕ್ ನಿರ್ಮಾಣಕ್ಕೆ ಕ್ರಮ: ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಅನುಗುಣವಾಗಿ ಮಾರುಕಟ್ಟೆಯನ್ನು ಸ್ಥಾಪಿಸುವುದು ನಮ್ಮ ಕರ್ತವ್ಯ. ಅದಕ್ಕಾಗಿ ಈಗಾಗಲೇ ತೋಟಗಾರಿಕೆ ಪಾರ್ಕ್ ನಿರ್ಮಾಣಕ್ಕೆ ಉದ್ದೇಶಿಸಿರುವ ಸಿರವಾರದ ಸುತ್ತಲಿನ ಪ್ರದೇಶದಲ್ಲಿ 194 ಎಕರೆ ಜಮೀನನ್ನು ಗುರುತಿಸಲಾಗಿದ್ದು, ಇದರಲ್ಲಿ 120 ಎಕರೆ ಪ್ರದೇಶ ಸರ್ಕಾರದ್ದಾಗಿದೆ. ಉಳಿದ 74 ಎಕರೆ ಖಾಸಗಿ ಜಮೀನು ಮಾಲೀಕರಿಂದ ಖರೀದಿಸಬೇಕಿದೆ. ರೈತರು ಭೂಮಿ ಕೊಡಲು ಮೀನಮೇಷ ಮಾಡುತ್ತಿರುವುದರಿಂದ ಅವರೊಂದಿಗೆ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ. ಆಗಲೂ ರೈತರು ಒಪ್ಪದಿದ್ದಲ್ಲಿ ಭೂಸ್ವಾದೀನಕ್ಕೆ ಕ್ರಮ ವಹಿಸಿ. ಅದಕ್ಕೂ ಮೊದಲು ಖಾಸಗಿ ಅವರಿಂದ ತೋಟಗಾರಿಕೆ ಪಾರ್ಕ್ ನಿರ್ಮಾಣದಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಮಾರುಕಟೆ ಸ್ಥಾಪಿಸುವ ಕುರಿತು ಚರ್ಚಿಸಿ. ಪರ್ಯಾಯವಾಗಿ ಹಾಗೂ ತಾತ್ಕಾಲಿಕವಾಗಿ ಕಾರಟಗಿ ತಾಲ್ಲೂಕಿನ ನವಲಿ ಗ್ರಾಮದಲ್ಲಿರುವ ರೈಸ್ ಟೆಕ್ನಾಲಜಿ ಪಾರ್ಕ್ನಲ್ಲಿ ತೋಟಗಾರಿಕಾ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ. ಅದಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಎಂದು ಸಚಿವರು ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ :

ಗಂಗಾವತಿ ಹಾಗೂ ಕುಷ್ಟಗಿ ತಾಲ್ಲೂಕು ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ಸಿ.ಟಿ.ಸ್ಕ್ಯಾನ್ ಯಂತ್ರಗಳ ನಿರ್ವಹಣೆಗೆ ನೇಮಕಗೊಂಡಿದ್ದ ಸಿಬ್ಬಂದಿಗೆ ಬಾಕಿ ಇರುವ ವೇತನ ಪಾವತಿಗೆ ಕ್ರಮ ವಹಿಸಿ. ಜಿಲ್ಲೆಯಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂ.ಬಿ.ಬಿ.ಎಸ್ ವೈದ್ಯರ ಕೊರತೆ ಇದ್ದು, ಶೀಘ್ರವಾಗಿ ವೈದ್ಯರ ನೇಮಕ ಮಾಡಿಕೊಳ್ಳಿ. ಜಿಲ್ಲೆಯ ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅವಶ್ಯವಿರುವ 100 ಹಾಸಿಗೆ ಆಸ್ಪತ್ರೆ ಹಾಗೂ 30 ಹಾಸಿಗೆ ಆಸ್ಪತ್ರೆಯ ಬಗ್ಗೆ ಪ್ರಸ್ತಾವನೆ ಸಿದ್ದಪಡಿಸಿ, ವರದಿ ಸಲ್ಲಿಸಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಿಂಗರಾಜು ಟಿ ಅವರಿಗೆ ಸಚಿವರು ಸೂಚಿಸಿದರು.

ಪತ್ರಿಕೆ, ಮಾಧ್ಯಮಗಳಲ್ಲಿ ಜಿಲ್ಲಾಸ್ಪತ್ರೆ ಬಗ್ಗೆ ಅನೇಕ ಋಣಾತ್ಮಕ ವರದಿಗಳು ಪ್ರಕಟವಾಗುತ್ತಿದ್ದು, ಜಿಲ್ಲಾಸ್ಪತ್ರೆ ವ್ಯವಸ್ಥೆಯನ್ನು ಸರಿಪಡಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಬೇರೆ ಊರು, ಜಿಲ್ಲೆಗಳಿಂದ ಬರುವ ರೋಗಿಗಳಿಗೆ ಟೋಕನ್ ನೀಡಲು ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಬೇಕು. ಕಿಮ್ಸ್ಗೆ ದಾಕಲಾಗುವ ರೋಗಿಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಅನಗತ್ಯ ವಿಳಂಬ ಮಾಡದೆ ಕೂಡಲೇ ಅಗತ್ಯ ಚಿಕಿತ್ಸೆ ನೀಡಬೇಕು. ಜಿಲ್ಲಾಸ್ಪತ್ರೆ ಹಾಗೂ ಕಿಮ್ಸ್ ಆವರಣದಲ್ಲಿ ಮಮತೆಯ ತೊಟ್ಟಿಲು ಇಡಲಾಗಿದ್ದು, ಈ ತೊಟ್ಟಿಲಿನಲ್ಲಿ ವಿವಿಧ ಕಾರಣಗಳಿಂದ ಬೇಡವಾದ ಮಗುವನ್ನು ಹಾಕಬಹುದು. ಆ ಮಗುವಿನ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳುತ್ತದೆ. ಇದರಿಂದ ಯಾವುದೇ ಪೋಷಕರಿಗೂ ತೊಂದರೆ ಆಗುವುದಿಲ್ಲ. ಈ ಬಗ್ಗೆ ಹೆರಿಗೆಗೆ ದಾಖಲಾಗುವ ಗರ್ಭಿಣಿ ಹಾಗೂ ಪೋಷಕರಿಗೆ ಸೂಕ್ತ ಮಾಹಿತಿ ನೀಡಿ. ಇದರಿಂದ ನವಜಾತ ಶಿಶುಗಳ ಮರಣವನ್ನು ತಪ್ಪಿಸಬಹುದು ಎಂದು ಕಿಮ್ಸ್ ನಿರ್ದೇಶಕರಿಗೆ ಸಚಿವರು ತಿಳಿಸಿದರು.

ಕಿಮ್ಸ್ ನೋಂದಣಿ ನವೀಕರಣ ಬಾಕಿ ಇದ್ದು, ಇದರಿಂದ ಕಿಮ್ಸ್ ಗೆ ರೂ.35 ಲಕ್ಷಗಳ ದಂಡವನ್ನು ವಿಧಿಸಲಾಗಿದೆ. ಇದರಲ್ಲಿ ಕಿಮ್ಸ್ ನಿರ್ದೇಶಕರ ಕರ್ತವ್ಯ ಲೋಪ ಕಂಡುಬರುತ್ತಿದ್ದು, ಈ ಬಗ್ಗೆ ಸಮಿತಿ ರಚಿಸಿ, 15 ದಿನಗಳೊಳಗೆ ವರದಿ ಸಲ್ಲಿಸಬೇಕು. ಇನ್ನುಮುಂದೆ ಜಿಲ್ಲಾಸ್ಪತ್ರೆ ಹಾಗೂ ಕಿಮ್ಸ್ನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವೈದ್ಯರು ಪರಸ್ಪರ ಸಹಕಾರ, ಸಮನ್ವಯದಿಂದ ಕಾರ್ಯನಿರ್ವಹಿಸಿ ರೋಗಿಗಳಿಗೆ ಉತ್ತಮ ಸೇವೆ ಒದಗಿಸಬೇಕು. ಜಿಲ್ಲಾಸ್ಪತ್ರೆಯ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಕಿಮ್ಸ್ ನಿರ್ದೇಶಕರಿಗೆ ಸಚಿವರು ಎಚ್ಚರಿಕೆ ನೀಡಿದರು.

ಸಂಕಲ್ಪ ಪುಸ್ತಕ ಬಿಡುಗಡೆ :

ಜಿಲ್ಲಾ ಪಂಚಾಯತಿಯಿಂದ ರಚಿಸಿರುವ ಜಿಲ್ಲೆಯ ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ ವಿವರ, ವಿಚಾರಗಳನ್ನು ಒಳಗೊಂಡ ‘ಸಂಕಲ್ಪ’ ಪುಸ್ತಕವನ್ನು ಸಚಿವರು ಹಾಗೂ ಶಾಸಕರು ಬಿಡುಗಡೆಗೊಳಿಸಿದರು.

 ಸಭೆಯಲ್ಲಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ದೊಡ್ಡನಗೌಡ ಪಾಟೀಲ್, ಜಿ.ಜನಾರ್ಧನ ರೆಡ್ಡಿ, ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಕೆ.ಡಿ.ಪಿ. ನಾಮನಿರ್ದೇಶಿತ ಸದಸ್ಯರಾದ ಕುರುಗೋಡ ರವಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಸೇರಿದಂತೆ ವಿವಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಸೀಲ್ದಾರರು, ತಾಪಂ ಇಓಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Read All News