ಸೇವಾದಳದ ತ್ಯಾಗ ಬಲಿದಾನ ಸ್ಮರಿಸಿ ಹುತಾತ್ಮರಿಗೆ ವಂದನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

promotions

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸೇವಾದಳ ಶತಮಾನೋತ್ಸವ ಮತ್ತು ರಾಜ್ಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. 

promotions

 ಕಾಂಗ್ರೆಸ್ ಪಕ್ಷ ಮತ್ತು ಸೇವಾದಳ ಮಾತ್ರ ಸಾಮಾಜಿಕ ನ್ಯಾಯ, ಹೋರಾಟ, ದೇಶದ ಸಮಗ್ರತೆ ಬಗ್ಗೆ ನಂಬಿಕೆ ಇಟ್ಟಕೊಂಡು ದೇಶವನ್ನು, ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತಿದೆ ಎಂದರು. 

ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡ ಚರಿತ್ರೆಯಾಗಲಿ, ಇತಿಹಾಸವಾಗಲಿ ಇಲ್ಲ. ಸೇವಾದಳ ತ್ಯಾಗ ಬಲಿದಾನಗಳ ಮೂಲಕ‌ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿತು ಎಂದರು. 

ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧಿ ಅವರ ಕನಸು. ನೆಹರೂ ಮತ್ತು ಇಂದಿರಾಗಾಂಧಿ ಅವರ ಕಾಲದಲ್ಲಿ ಗ್ರಾಮಗಳ ಪ್ರಗತಿಗೆ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ನಮ್ಮ ಸರ್ಕಾರ ಕೂಡ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಚುನಾವಣೆಯಲ್ಲಿ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಹಿಂದಿನ ಬಾರಿಯೂ ಈಡೇರಿಸಿದ್ದೇವೆ. ಈ ಬಾರಿಯೂ ಈಡೇರಿಸುತ್ತಲೇ ಇದ್ದೇವೆ ಎಂದು ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ವಿವರಿಸಿದರು. 

ಸೇವಾದಳ ಕಾರ್ಯಕರ್ತರ ನಿಸ್ವಾರ್ಥ ಸೇವೆಯಿಂದ , ಪ್ರಾಮಾಣಿಕ ಹೋರಾಟದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಬುಡಸಮೇತ ಕಿತ್ತೊಗೆದು ಭಾರತವನ್ನು ಕಾಪಾಡಿಕೊಳ್ಳುವ ರಾಹುಲ್ ಗಾಂಧಿ ಅವರ ಗುರಿಯನ್ನು ಸಾಧಿಸಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Read More Articles