ವೈರಲ್ ಆಡಿಯೋಗೆ ಆತ್ಮಹತ್ಯೆ ಮಾಡಿಕೊಂಡ್ರಾ ಸ್ವಾಮೀಜಿ..?
- 15 Jan 2024 , 12:54 AM
- Belagavi
- 228
ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಇಬ್ಬರು ಮಹಿಳೆಯರ ನಡುವೆ ಮಾತನಾಡಿದ್ದ ಮೊಬೈಲ್ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮುರುಘಾ ಮಠದ ಶಿವಾಚಾರ್ಯ ಅವರ ಮೇಲಿನ ಅತ್ಯಾಚಾರ ಆರೋಪದ ಕುರಿತು ಇಬ್ಬರು ಮಹಿಳೆಯರು ಮಾತನಾಡುತ್ತಿದ್ದರು. ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಒಂದು ಮಹಿಳೆ ಸಂಭಾಷಣೆಯಲ್ಲಿ ಆರೋಪಿಸುತ್ತಾರೆ. ಆ ಸಂಭಾಷಣೆಯ ನಡುವೆ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರನ್ನು ಮಹಿಳೆ ಉಲ್ಲೆಖಿಸುತ್ತಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಯಾವ ಕಾರಣ ನೀಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಇದು ಪೊಲೀಸ್ ವಿಚಾರಣೆಗೆ ಬಳಿಕ ಸತ್ಯಾಸತ್ಯೆತೆ ಹೊರಬರಲಿದೆ.










