ಸಚಿವರಿದ್ದಾಗ ಬೆಳಗಾವಿ ಎಂದರೆ ಜಗದೀಶ್ ಶೆಟ್ಟರಿಗೆ ಸಿಟ್ಟು ಬರುತ್ತಿತ್ತು - ಚನ್ನರಾಜ ಹಟ್ಟಿಹೊಳಿ
- shivaraj bandigi
- 17 Apr 2024 , 11:57 AM
- Belagavi
- 482
ಬೆಳಗಾವಿ: ಲೋಕಸಭಾ ಚುನಾವಣೆಗೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿ, ಬೆಳಗಾವಿ ನನ್ನ ಕರ್ಮ ಭೂಮಿ ಎನ್ನುತ್ತಿರುವ ಜಗದೀಶ್ ಶೆಟ್ಟರ್ ಅವರಿಗೆ ಅವರು ಸಚಿವರಾಗಿದ್ದಾಗ ಬೆಳಗಾವಿ ಎಂದರೆ ಸಿಟ್ಟು ಬರುತ್ತಿತ್ತು. ನಾನು ಬೆಳಗಾವಿಗೆ ಇಂಡಸ್ಟ್ರಿಯಲ್ ಕಾರಿಡಾರ್ ಮಾಡೋಣ ಎಂದು ಒತ್ತಾಯಿಸಿದ್ದಕ್ಕೆ ನನ್ನ ಮೇಲೆ ಮುನಿಸಿಕೊಂಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆರೋಪಿಸಿದ್ದಾರೆ.

ಬೆಳಗಾವಿಯ ಕಣಬರ್ಗಿಯಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಅವರು ಮತಯಾಚನೆ ಮಾಡುತ್ತಿದ್ದರು. ಜಗದೀಶ್ ಶೆಟ್ಟರ್ ಕೈಗಾರಿಕೆ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಉದ್ಯಮಿಗಳ ಸಭೆ ಕರೆದಿದ್ದರು. ಆ ಸಭೆಯಲ್ಲಿ ಉದ್ಯಮಿಯಾಗಿ ನಾನು ಭಾಗವಹಿಸಿದ್ದೆ. ಯಾವುದೇ ಕೈಗಾರಿಕೆ ಸ್ಥಾಪನೆ ಮತ್ತು ಇಂಡಸ್ಟ್ರಿಯಲ್ ಕಾರಿಡಾರ್ ವಿಷಯ ಬಂದಾಗ ಹುಬ್ಬಳ್ಳಿಗೆ ಎನ್ನುತ್ತಿದ್ದರು. ಆ ಸಂದರ್ಭದಲ್ಲಿ ನಾನು, ಇಂಡಸ್ಟ್ಟಿಲ್ ಕಾರಿಡಾರ್ ಬೆಳಗಾವಿಯಲ್ಲಿ ಸ್ಥಾಪಿಸೋಣ ಎಂದು ಹೇಳಿದೆ. ಇದರಿಂದ ಅವರು ಸರಿಯಾಗಿ ಉತ್ತರವನ್ನೂ ನೀಡದೆ ನನ್ನ ಮೇಲೆ ಮುನಿಸಿಕೊಂಡರು. ಬೆಳಗಾವಿ ಎಂದರೆ ಅವರಿಗೆ ಅಸಡ್ಡೆಯಾಗಿತ್ತು. ಅಂತಹ ಶೆಟ್ಟರ್ ಇಂದು ನಿಮ್ಮಮತಕ್ಕಾಗಿ ಬೆಳಗಾವಿ ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ. ಬೆಳಗಾವಿಗೆ ಅನ್ಯಾಯ ಮಾಡಿರುವ ನಿಮಗೆ ಮತ ನೀಡಲು ಬೆಳಗಾವಿಗರೇನು ಹುಚ್ಚರಾ ಎಂದು ಚನ್ನರಾಜ ಪ್ರಶ್ನಿಸಿದರು.

ಶೆಟ್ಟರ ಅವರೇ ನೀವು ಬೆಳಗಾವಿಗೆ ಅನ್ಯಾಯ ಮಾಡಿದ್ದಕ್ಕೆ ಉತ್ತರಿಸಬೇಕು. ಮುಖ್ಯಮಂತ್ರಿಯಾಗಿದ್ದಾಗ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಬೆಳಗಾವಿಗೆ ಏನಾದರೂ ಯೋಜನೆ ತರಲು ನಿಮಗೆ ಅವಕಾಶವಿತ್ತು. ಕೈಗಾರಿಕೆಯಂತ ಉತ್ತಮ ಖಾತೆಯೂ ಇತ್ತು. ಆದರೆ ನಿಮಗೆ ಕೇವಲ ಹುಬ್ಬಳ್ಳಿ - ಧಾರವಾಡ ಮಾತ್ರ ಕಾಣುತ್ತಿತ್ತು. ಹುಬ್ಬಳ್ಳಿ - ಧಾರವಾಡದ ಜನರೇನು ನಮ್ಮ ವಿರೋಧಿಗಳಲ್ಲ. ಅಲ್ಲೂ ಬೆಳೆಯಲು, ಆದರೆ ಎಲ್ಲವೂ ಅಲ್ಲಿಗೆ ಹೋದರೆ ಸಮಾನತೆ ಎನ್ನುವುದಕ್ಕೆ ಬೇಲೆ ಏನು ಉಳಿಯಿತು. ಬೆಳಗಾವಿ ಅಸಮಾನತೆಯಿಂದ ಬಳಲುತ್ತಿದೆ. ಹುಬ್ಬಳ್ಳಿ - ಧಾರವಾಡದ ಮಟ್ಟದಲ್ಲಿ ಬೆಳೆಯಬೇಕೆಂದರೆ ಯುವಕ ಮೃಣಾಲ ಹೆಬ್ಬಾಳಕರ್ ಅವರಿಗೆ ಮತ ನೀಡಿ ಆಯ್ಕೆ ಮಾಡಿ ಎಂದುಅವರು ವಿನಂತಿಸಿದರು.










