ಕಾಂಗ್ರೆಸ ಸರ್ಕಾರದ ಆದೇಶದ ವಿರುದ್ದ ಹರಿಹಾಯ್ದ ಬಿಜೆಪಿ ಪಡೆ

ಬೆಳಗಾವಿ :ಬರಗಾಲ, ಅನಿಯಮಿತ ವಿದ್ಯುತ್‌ ಲೋಡ್ ಶೆಡ್ಡಿಂಗ್‌ ನಿಂದ ಕಂಗಾಲದ ರೈತರ ಗಾಯದ ಮೇಲೆ ಬರೆ ಎಳೆದಂತೆ ಇನ್ನೂ ಮುಂದೆ ರೈತರ ಪಂಪಸೆಟ್‌ ಗಳಿಗೆ ವಿದ್ಯುತ್ ಪಡೆಯಬೇಕಾದರೇ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‌ ಫಾರ್ಮ‌, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್‌ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ ಎಂದು ರಾಜ್ಯಸಭಾ ಸಂಸದರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ  ಈರಣ್ಣ ಕಡಾಡಿ  ಹೇಳಿದ್ದಾರೆ.

promotions

ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್‌ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ.

promotions

ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ಹೊಗಿದೆ. ಪ್ರಸ್ತುತ ಹಿಂಗಾರಿನಲ್ಲಿ ಕೂಡ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ಘೋಷಿಸಲಾಗಿದೆ ತಾಲೂಕುಗಳು ಸಂಪೂರ್ಣ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ತಳವಳಿಕಾರಿ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲಿಕ್ಕೆ ರೈತರು ತೆರೆದ ಬಾವಿ, ಕೊಳವೆ ಭಾವಿಗಳ ಮೋರೆ ಹೋಗಿದ್ದಾರೆ. ಆದರೆ ಹಗಲು ಹೊತ್ತಿನಲ್ಲಿ ವಿದ್ಯುತ್‌ ಪೂರೈಕೆಯಾಗಲಾರದೇ ಅನಿಯಮಿತ ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ರೈತರು ಬಸವಳಿದು ಹೊಗುವಂತಾಗಿದೆ.

ಈ ಹಿಂದಿನ ರೈತ ಪರವಾದ ಯೋಜನೆಗಳಾದ ಕಿಸಾನ್ ಸಮ್ಮಾನ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ರದ್ದು ಮಾಡಲಾಗಿದೆ

ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ದೂರಿದ್ದಾರೆ.

ಹೀಗಾಗಿ ರೈತನ ಬದುಕು ಅತ್ಯಂತ ಅಸಹನಿಯವಾಗಿದೆ. ರೈತರ ಕೃಷಿ ಪಂಪಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕಾಗಿ ಸರ್ಕಾರವನ್ನು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಒತ್ತಾಯಿಸುತ್ತದೆ ಎಂದು ಹೇಳಿದ್ದಾರೆ.

ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೇ ರಾಜ್ಯದ ಸುಮಾರು 35 ಲಕ್ಷ ಪಂಪ್‌ಸೆಟ್‌ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.

Read More Articles