ಖರ್ಗೆ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಉನ್ನತ ಮಟ್ಟಕ್ಕೆ ಏರಲಿದೆ - ಹೆಬ್ಬಾಳಕರ್, ಹಟ್ಟಿಹೊಳಿ

ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ,. ಖರ್ಗೆ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಉನ್ನತ ಮಟ್ಟಕ್ಕೆ ಏರಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

promotions

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ಕರ್ನಾಟಕದ ಹೆಮ್ಮೆ. ಖರ್ಗೆ ಆಯ್ಕೆಯಿಂದ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ ಬಂದಂತಾಗಿದೆ. ಈ ಉನ್ನತ ಸ್ಥಾನ ಅಲಂಕರಿಸಿರುವುದಕ್ಕೆ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

promotions

ಮಲ್ಲಿಕಾರ್ಜುನ ಖರ್ಗೆ 50 ವರ್ಷಗಳ ಕಾಲ ಸುದೀರ್ಘವಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಪಕ್ಷ ನಿಷ್ಠೆ, ತ್ಯಾಗ, ಹೋರಾಟದ ಛಲ ಇದ್ದರೆ ಒಳ್ಳೆ ಅವಕಾಶ ಸಿಗುತ್ತದೆ ಎನ್ನುವುದಕ್ಕೆ ಖರ್ಗೆ ಅವರೇ ಸಾಕ್ಷಿ. ಜೊತೆಗೆ, ಈ ಹಿಂದೆ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದ ಪರಮೋಚ್ಛ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಈಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನೂ ಬಿಟ್ಟುಕೊಡುವ ಮೂಲಕ ಇಡೀ ದೇಶಕ್ಕೆ ಉತ್ತಮ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ನಿಜವಾದ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೆಬ್ಬಾಳಕರ್ ಹಾಗೂ ಹಟ್ಟಿಹೊಳಿ ತಿಳಿಸಿದ್ದಾರೆ. 

ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಸಂಘಟನಾತ್ಮಕವಾಗಿ ಸಾಕಷ್ಟು ಬೆಳೆದಿದೆ. ಖರ್ಗೆ ಅವರು ಅಧ್ಯಕ್ಷರಾಗಿರುವುದರಿಂದ ಕರ್ನಾಟಕದಲ್ಲಿ ಇನ್ನಷ್ಟು ಬೆಳವಣಿಗೆ ಹೊಂದಲಿದೆ. 2023ರ ವಿಧಾನ ಸಭೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಎಲ್ಲ ಪಕ್ಷಗಳನ್ನೂ ಹಿಂದಿಕ್ಕಲಿದೆ ಎಂದು ಅವರು ವಿಶ್ವಾಸ ವ್ಯಕ್ಯಪಡಿಸಿದ್ದಾರೆ.

Read More Articles