ವೀರಭದ್ರೇಶ್ವರ, ಬಸವೇಶ್ವರರ ಹೆಸರಲ್ಲಿ ಚನ್ನರಾಜ ಹಟ್ಟಿಹೊಳಿ ಪ್ರಮಾಣ ವಚನ; ಶಕ್ತಿ ಕೇಂದ್ರದ ಮೆಟ್ಟಿಲಿಗೆ ನಮಸ್ಕರಿಸಿ ಮೇಲೇರಿದ ಎಂಎಲ್ಸಿ
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಬೆಳಗಾವಿಯ ಚನ್ನರಾಜ ಬಸವರಾಜ ಹಟ್ಟಿಹೊಳಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಮನೆ ದೇವರಾದ ವೀರಭದ್ರೇಶ್ವರ ಮತ್ತು ಬಸವೇಶ್ವರರ ಹೆಸರಿನಲ್ಲಿ ಚನ್ನರಾಜ ಹಟ್ಟಿಹೊಳಿ ಪ್ರಮಾಣ ವಚನ ಸ್ವೀಕರಿಸಿದರು.
ತಾಯಿ ಗಿರಿಜಾ ಹಾಗೂ ಬೆಳಗಾವಿ ಜಿಲ್ಲೆಯ ಹೆಸರನ್ನೂ ಉಲ್ಲೇಖಿಸಿ ನಂತರ ಮನೆ ದೇವರು ವೀರಭದ್ರೇಶ್ವರ ಹಾಗೂ ಬಸವೇಶ್ವರರ ಹೆಸರನ್ನು ಪ್ರಮಾಣ ವಚನ ಸ್ವೀಕಾರದ ವೇಳೆ ಉಲ್ಲೇಖಿಸಿದರು.
ಇದಕ್ಕೂ ಮುನ್ನ ಚನ್ನರಾಜ ಹಟ್ಟಿಹೊಳಿ ವಿಧಾನಸೌಧದ ಮೆಟ್ಟಿಲುಗಳಿಗೆ ಭಾಗಿ ನಮಸ್ಕರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಮಹಾಂತೇಶ ಕೌಜಲಗಿ, ಶ್ರೀನಿವಾಸ ಮಾನೆ, ಲಕ್ಷ್ಮಿ ಹೆಬ್ಬಾಳಕರ್ , ಮುಖಂಡರಾದ ಎ.ಬಿ.ಪಾಟೀಲ, ಶಾಮ್ ಘಾಟಗೆ, ರಾಜು ಕಾಗೆ, ಧೂಳಗೌಡ ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.